ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಬಾರಿ ಉತ್ತರಕನ್ನಡ ಜಿಲ್ಲೆಗೆ ಸಚಿವ ಸ್ಥಾನ ದೊರೆಯದಿರುವುದು ತೀವ್ರ ನಿರಾಶೆ ತಂದಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಸಾದ ಗಾಂವಕರ್ ಅಮದಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಉತ್ತರಕನ್ನಡ ಜಿಲ್ಲೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಹತ್ವದ ಹಲವು ಯೋಜನೆಗಳಿಗೆ ನೆಲೆಯಾಗಿದೆ. ಇನ್ನೂ ಅನೇಕ ಪ್ರಮುಖ ಯೋಜನೆಗಳು ಜಾರಿಯಾಗುವ ಹಂತದಲ್ಲಿದ್ದು, ಇಂತಹ ಸಂದರ್ಭದಲ್ಲಿ ಜಿಲ್ಲೆಯ ಪರವಾಗಿ ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಧ್ವನಿಯಾಗುವ ಸಚಿವರ ಅಗತ್ಯವಿತ್ತು ಎಂದು ತಿಳಿಸಿದ್ದಾರೆ.
ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಗೆ ಹೋಲಿಸಿದರೆ ಉತ್ತರಕನ್ನಡ ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿದಂತೆ ಹಲವು ಅಭಿವೃದ್ಧಿ ಕ್ಷೇತ್ರಗಳಲ್ಲಿ ಇನ್ನೂ ಹಿಂದುಳಿದಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸುವ ಅಗತ್ಯವಿದ್ದು, ಸಚಿವ ಸ್ಥಾನ ಸಿಕ್ಕಿದ್ದರೆ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ವೇಗ ಸಿಗುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ, ನದಿ, ಸಮುದ್ರ ಸೇರಿದಂತೆ ಅಪಾರ ನೈಸರ್ಗಿಕ ಸಂಪತ್ತನ್ನು ಹೊಂದಿರುವ ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಉತ್ತರಕನ್ನಡಕ್ಕೆ ಸಚಿವ ಸ್ಥಾನ ನೀಡದೇ ಇರುವುದು ಬೇಸರದ ಸಂಗತಿಯಷ್ಟೇ ಅಲ್ಲ, ಜಿಲ್ಲೆಯ ಜನರ ನಿರೀಕ್ಷೆಗೆ ಧಕ್ಕೆ ತಂದಂತಾಗಿದೆ ಎಂದು ಪ್ರಸಾದ ಗಾಂವಕರ್ ಹೇಳಿದ್ದಾರೆ.
ಇದನ್ನೂ ಓದಿ/ “ಮಂಕಾಳ್ ವೈದ್ಯರಿಗೆ ಸಚಿವ ಸ್ಥಾನ ಬೇಡ ಎಂದವರು ಯಾರು..? ಉತ್ತರ ಕನ್ನಡ ರಾಜಕೀಯದ ಬಿಗ್ ರಿವೀಲ್!”

