ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಪಕ್ಷದ ಸಂಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸದಾ ಮುಂಚೂಣಿಯಲ್ಲಿದ್ದು, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಕರೆ ನೀಡಿದರು.

ಶಿರಸಿಯ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸಭಾಭವನದಲ್ಲಿ ನಡೆದ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸಬೇಕು. ಹರ್ ಘರ್ ತಿರಂಗಾ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ರೂಪಾಲಿ ನಾಯ್ಕ, ‘ಏಕ್ ಭಾರತ್, ಶ್ರೇಷ್ಠ ಭಾರತ್’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಈಡೇರಿಕೆಗೆ ನಾವೆಲ್ಲರೂ ಕೈಜೋಡಿಸಬೇಕು. ಹರ್ ಘರ್ ತಿರಂಗಾ ದೇಶಭಕ್ತಿಯ ಭಾವನೆಯನ್ನು ಬಲಪಡಿಸುವ ಮಹತ್ವದ ಅಭಿಯಾನವಾಗಿದ್ದು, ಪ್ರತಿಯೊಬ್ಬರೂ ಹೆಮ್ಮೆಯಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು.

ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಯಾಗಬೇಕು. ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರಧ್ವಜ ಹಾರುವಂತಾಗಬೇಕು. ದೇಶಭಕ್ತಿಯ ಭಾವನೆ ಎಲ್ಲೆಡೆ ಮೊಳಗುವಂತೆ ಪಕ್ಷದ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.

ಪ್ರತಿ ಮಂಡಲಕ್ಕೆ 500 ಧ್ವಜ ವಿತರಿಸಿದ ರೂಪಾಲಿ ನಾಯ್ಕ
ಹರ್ ಘರ್ ತಿರಂಗಾ ಅಭಿಯಾನದ ರಾಜ್ಯ ಸಂಚಾಲಕಿಯಾಗಿರುವ ರೂಪಾಲಿ ಎಸ್. ನಾಯ್ಕ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಬಿಜೆಪಿ ಮಂಡಲಕ್ಕೆ ತಲಾ 500 ರಾಷ್ಟ್ರಧ್ವಜಗಳನ್ನು ವಿತರಿಸಿದ್ದರು.ರಾಜ್ಯದಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ರೂಪಾಲಿ. ನಾಯ್ಕ ಅವರು ರಾಜ್ಯದ ವಿವಿಧೆಡೆ ನಡೆಯುತ್ತಿರುವ ಸಭೆ ಹಾಗೂ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಅಭಿಯಾನದ ಕುರಿತು ಮಾಹಿತಿ ನೀಡುತ್ತಿದ್ದಾರೆ.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ , ಮಾಜಿ ಶಾಸಕರಾದ ಸುನೀಲ್ ಹೆಗಡೆ, ಸುನೀಲ್ ನಾಯ್ಕ್, ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ, ಪ್ರಮುಖರಾದ ಕೆ.ಜಿ. ನಾಯ್ಕ್, ಗೋವಿಂದ ನಾಯ್ಕ್, ಅಶೋಕ ಛಲವಾದಿ, ಎಂ.ಜಿ. ಭಟ್, ಸಂತೋಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಹರ್ ಘರ್ ತಿರಂಗಾ ಅಭಿಯಾನದ ಜಿಲ್ಲಾ ಸಂಚಾಲಕ ಸುಬ್ರಾಯ ವಾಳ್ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಡಿ. ಹೆಗಡೆ ಅವರು ಎಸ್‌ಐಆರ್ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಪಕ್ಷದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು