ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಪುನರ್ರಚನೆ ಹಾಗೂ ಪ್ರಮುಖ ಹುದ್ದೆಗಳ ನೇಮಕಾತಿ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ್ ವೈದ್ಯ ಅವರನ್ನ ಡೆಪ್ಯೂಟಿ ಸ್ಪೀಕರ್ (ಉಪಸಭಾಪತಿ) ಸ್ಥಾನಕ್ಕೆ ನೇಮಕ ಮಾಡಲಾಗಿದ್ದು, ಇನ್ನೂ ಆರ್ ವಿ ದೇಶಪಾಂಡೆ ಅವರನ್ನ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮಂಕಾಳ್ ವೈದ್ಯ ಅವರನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಕಾರ್ಯದರ್ಶಿಯಾಗಿ ನೇಮಕ ಮಾಡುವ ಸಾಧ್ಯತೆ ಇತ್ತು ಇತ್ತು. ಆದರೆ ಇದೀಗ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಮಂಕಾಳ್ ವೈದ್ಯ ಅವರಿಗೆ ಇದೀಗ ಉಪಸಭಾಪತಿ ಸ್ಥಾನ ಘೋಷಣೆ ಮಾಡಲಾಗಿದೆ. ಮಂಕಾಳ್ ವೈದ್ಯ ಅವರಿಗೆ ಇದೀಗ ಉಪಸಭಾಪತಿ ಸ್ಥಾನ ಘೋಷಣೆ ಮಾಡಲಾಗಿದೆ.
ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿತ್ತು
ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂಕಾಳ್ ವೈದ್ಯ ಅವರ ಹೆಸರು ಪಟ್ಟಿಯಲ್ಲಿ ಪ್ರಕಟವಾದ ಬಳಿಕ ಅಂತಿಮ ಕ್ಷಣದಲ್ಲಿ ಸಚಿವ ಸ್ಥಾನದಿಂದ ಅವರನ್ನು ಕೈಬಿಡಲಾಗಿತ್ತು. ಇದರಿಂದ ಮೀನುಗಾರ ಸಮುದಾಯ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಮಂಕಾಳ್ ವೈದ್ಯ ಅವರು ರಾಜ್ಯದಲ್ಲೇ ಮೀನುಗಾರ ಸಮುದಾಯದಿಂದ ಪ್ರತಿನಿಧಿಸಿದ್ದ ಏಕೈಕ ಶಾಸಕರಾಗಿದ್ದಾರೆ. ಈ ಹಿಂದೆ ಮೀನುಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವುದು ಸೇರಿದಂತೆ ಇಲಾಖೆಯಲ್ಲಿ ಹಲವು ಪ್ರಮುಖ ಬದಲಾವಣೆಯನ್ನ ಕೈಗೊಂಡಿದ್ದರು. ಸಚಿವ ಸಂಪುಟದಲ್ಲಿ ಮಂಕಾಳ್ ವೈದ್ಯ ಅವರಿಗೆ ಸ್ಥಾನ ನೀಡದಿರುವುದು ಮೀನುಗಾರ ಸಮುದಾಯಕ್ಕೆ ಅನ್ಯಾಯವಾಗಿರುವ ಬಗ್ಗೆ ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಮೀನುಗಾರ ಅಸಮಧಾನಕ್ಕೆ ಕಾರಣವಾಗಿತ್ತು.
ಐವರು ಶಾಸಕರಿದ್ದರೂ ಸಚಿವ ಸ್ಥಾನ ಇರಲಿಲ್ಲ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ನ ನಾಲ್ವರು ಶಾಸಕರು ಹಾಗೂ ಕಾಂಗ್ರೆಸ್ ಬೆಂಬಲಿತ ಓರ್ವ ಶಾಸಕ ಸೇರಿದಂತೆ ಒಟ್ಟು ಐವರು ಶಾಸಕರಿದ್ದರೂ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವುದು ರಾಜಕೀಯ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.ಇದೀಗ ಮಂಕಾಳ್ ವೈದ್ಯ ಅವರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ಹಾಗೂ ಹಳಿಯಾಳದ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಮೂಲಕ ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿನ ಅಸಮಾಧಾನವನ್ನು ತಗ್ಗಿಸುವ ಪ್ರಯತ್ನ ನಡೆದಿದೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.
ದೇಶಪಾಂಡೆ ಅವರಿಗೆ ಈ ಹಿಂದಿನ ಜವಾಬ್ದಾರಿಯೇ ಮುಂದುವರಿಕೆ
ಇನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿದ್ದ ಹಳಿಯಾಳದ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಹಿಂದಿನ ಸ್ಥಾನಮಾವನ್ನೇ ಮುಂದುವರಿಸಲಾಗಿದೆ.
ಇದನ್ನೂ ಓದಿ/ಸಚಿವ ಸಂಪುಟ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ.? ಇಲ್ಲಿದೆ ಸಂಪೂರ್ಣ ಪಟ್ಟಿ



