ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ: ಗಣೇಶಗುಡಿಯಿಂದ ದಾಂಡೇಲಿಗೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಕೆಪಿಸಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಉಸೋಡಾದಲ್ಲಿ ನಡೆದಿದೆ.
ಗಣೇಶಗುಡಿಯ ಕೆಪಿಸಿ ಉದ್ಯೋಗಿ,ಮಲ್ಲಿಕಾರ್ಜುನ ರಾವ್ (೪೦) ಎಂದು ಗುರುತಿಸಲಾಗಿದೆ.ಅವರು ವಕೀಲರಾಗಿರುವ ತಮ್ಮ ಪತ್ನಿಯನ್ನು ಕರೆದುಕೊಂಡು ಬರಲು ಗಣೇಶಗುಡಿಯಿಂದ ದಾಂಡೇಲಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆ ಕೆಪಿಸಿ ನೌಕರರು ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ರಾವ್ ಅವರನ್ನು ದಾಂಡೇಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ತೆರಳುವರಷ್ಟರಲ್ಲಿ ಆತ ಮೃತ ಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತರ ಕುಟುಂಬಸ್ಥರು, ಕೆಪಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಕೀಲರು, ಅವೇಡಾ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಅರುಣ್ ಭಗವತಿರಾಜ್,ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಗಣೇಶಗುಡಿ ಹಾಗೂ ದಾಂಡೇಲಿ ಭಾಗದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಮಾಯಿಸಿದ್ದರು. ಘಟನೆಯಿಂದ ಗಣೇಶಗುಡಿ ಹಾಗೂ ದಾಂಡೇಲಿ ಭಾಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ/ಉಪಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಹೆಸರು ಸೂಚಿಸಿ ಪ್ರಸ್ತಾವನೆ ಸಲ್ಲಿಸಿದ ಸಿಎಂ ಡಿಕೆಶಿ



