ಸುದ್ದಿಬಿಂದು ಬ್ಯೂರೋ ವರದಿ

ಕಾರವಾರ : ತಾಲೂಕಿನ ರಾಜ್ಯ ಹೆದ್ದಾರಿ 6 ರ ಕಾರವಾರ-ದೇವಳಮಕ್ಕಿ-ಕೆರವಾಡಿ-ಬೋಳ್ವೆ-ಇರಪಾಗೆ-ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚಿನ ಭಾರವುಳ್ಳ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಬೃಹತ್ ಹಾಗೂ ಅಧಿಕ ಭಾರದ ವಾಹನಗಳ ನಿರಂತರ ಸಂಚಾರದಿಂದಾಗಿ ಈ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಜೀವಾಪಾಯ ಉಂಟಾಗುವ ಸಾಧ್ಯತೆ ಹೆಚ್ಚಿರುವುದರಿಂದ,ಸಾರ್ವಜನಿಕ ಸುರಕ್ಷತೆಯ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಳಾದ ರಸ್ತೆಯನ್ನು ತಕ್ಷಣವೇ ದುರಸ್ತಿಗೊಳಿಸಿ ಸಾರ್ವಜನಿಕರ ಲಘು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ NPCIL ಕೈಗಾದ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿದೆ.

ಲೋಕೋಪಯೋಗಿ ಇಲಾಖೆಯಿಂದ ವಾಹನ ನಿಷೇಧ ಕುರಿತು ಎಚ್ಚರಿಕಾ ಫಲಕಗಳನ್ನು ಅಳವಡಿಸುವಂತೆ ಮತ್ತು ರಸ್ತೆ ದುರಸ್ತಿಯಾದ ನಂತರ,ಬೃಹತ್ ವಾಹನಗಳ ಸಂಚಾರಕ್ಕೆ ರಸ್ತೆ ಯೋಗ್ಯವಾಗಿದೆ ಎಂಬ ಕುರಿತು ರಸ್ತೆ ಸುರಕ್ಷತಾ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಪೊಲೀಸ್ ಇಲಾಖೆಯಿಂದ ಅಗತ್ಯ ಸ್ಥಳಗಳಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಸಂಚಾರ ದಟ್ಟಣೆ ಉಂಟಾಗದoತೆ ಸೂಕ್ತ ಕ್ರಮ ವಹಿಸಬೇಕು ಹಾಗೂ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಯಾವುದೇ ಅಪಘಾತಗಳು ಸಂಭವಿಸದoತೆ ನಿಗಾ ವಹಿಸಬೇಕು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ/ ಕರಾವಳಿಯಲ್ಲಿ ಹೆಚ್ಚುತ್ತಿರುವ ಬೋಟ್‌ ದುರಂತ: ಸಚಿವರು ಮಾತ್ರ ಮೌನ…!