ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ ಶಿಕ್ಷಣ ನೀಡಬೇಕಾದ ಶಾಲೆಯಲ್ಲೇ ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಕೆಲಸ ಮಾಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ3ರಲ್ಲಿ ಶಾಲಾ ಮಕ್ಕಳನ್ನು ಜಾರುವ ಅಪಾಯಕಾರಿ ಹಂಚಿನ ಮೇಲ್ಛಾವಣಿಗೆ ಹತ್ತಿಸಿ ಸ್ವಚ್ಛತಾ ಕೆಲಸ ಮಾಡಿಸಲಾಗುತ್ತಿದೆ ಎಂಬ ಆರೋಪ ಪಾಲಕರಿಂದ ಕೇಳಿಬಂದಿದ್ದು, ಈ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವಿದ್ಯಾರ್ಥಿಗಳನ್ನ ಮೇಲ್ಛಾವಣಿಗೆ ಹತ್ತಿಸುವ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಹಂಚಿನ ಮೇಲ್ಛಾವಣಿಯಲ್ಲಿ ಕಾಲು ಜಾರಿ ವಿದ್ಯಾರ್ಥಿಗಳು ಕೆಳಗೆ ಬಿದ್ದಲ್ಲಿ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇದ್ದರೂ, ವಿದ್ಯಾರ್ಥಿಗಳನ್ನು ಇಂತಹ ಅಪಾಯಕಾರಿ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಎಷ್ಟು ಸಮಂಜಸ ಎಂದು ಪಾಲಕರು ಹಾಗೂ ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ.
ವಿದ್ಯಾರ್ಥಿಗಳು ಶಿಕ್ಷಣ ನೀಡಬೇಕಾದ ಶಿಕ್ಷಕರೇ ಅವರ ಜೀವವನ್ನು ಅಪಾಯಕ್ಕೆ ತಳ್ಳುವಂತಹ ಕೆಲಸ ಮಾಡಿಸಿರುವುದು ನಿಜವಾಗಿದ್ದರೆ, ಇದಕ್ಕೆ ಹೊಣೆ ಯಾರು..? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಶಾಲಾ ಮಕ್ಕಳ ಸುರಕ್ಷತೆ ಮತ್ತು ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕಾದ ಶಿಕ್ಷಣ ಸಂಸ್ಥೆಯಲ್ಲಿ ಇಂತಹ ಘಟನೆ ನಡೆದಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಬೇಕು. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಅಪಾಯಕಾರಿ ಕೆಲಸಕ್ಕೆ ಬಳಸಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

