ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಕರ್ನಾಟಕ ರಾಜ್ಯ ಸರ್ಕಾರ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕುಮಟಾ ತಾಲೂಕಿನ ಅಘನಾಶಿನಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಮತಾ ಆರ್. ನಾಯ್ಕ ಅವರು ಭಾಜನರಾಗಿದ್ದಾರೆ.
ಕುಮಟಾ ತಾಲೂಕಿನ ಕೊನಳ್ಳಿ ಗ್ರಾಮದವರಾದ ಮಮತಾ ನಾಯ್ಕ ಅವರು ಉಪನ್ಯಾಸಕ ಪ್ರಮೋದ ನಾಯ್ಕ ಅವರ ಧರ್ಮಪತ್ನಿಯಾಗಿದ್ದಾರೆ. ಶಾಲಾ ದಿನಗಳಲ್ಲಿಯೇ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಮಮತಾ ನಾಯ್ಕ ಅವರು, ಶಿಕ್ಷಕಿಯಾಗಬೇಕು ಎಂಬ ಗುರಿಯನ್ನು ಹೊಂದಿದ್ದರು. ತಮ್ಮ ಗುರಿಯಂತೆ ಶಿಕ್ಷಕ ವೃತ್ತಿಗೆ ಪ್ರವೇಶಿಸಿ, ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಮಂಗಲಾ ಪ್ರೌಢಶಾಲೆಯಲ್ಲಿ 2003ರಲ್ಲಿ ಸಹ ಶಿಕ್ಷಕಿಯಾಗಿ ವೃತ್ತಿ ಆರಂಭಿಸಿದ ಅವರು, ಅಲ್ಲಿಯೂ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದರು. 2011ರಲ್ಲಿ ಕೆಇಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕುಮಟಾ ತಾಲೂಕಿನ ಅಘನಾಶಿನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ನೇಮಕಗೊಂಡರು. ಕಳೆದ 14 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಅವರು, ಹಲವು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮಾರ್ಗದರ್ಶಕರಾಗಿದ್ದಾರೆ.
ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಮಮತಾ ನಾಯ್ಕ ಅವರ ಕಾರ್ಯದಕ್ಷತೆಯಿಂದಾಗಿ, ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಗ್ರಾಮೀಣ ಪ್ರದೇಶದ ಅಘನಾಶಿನಿ ಸರ್ಕಾರಿ ಪ್ರೌಢಶಾಲೆ ಕಳೆದ ಏಳೆಂಟು ವರ್ಷಗಳಿಂದ ಸತತವಾಗಿ ಶೇ.100ರಷ್ಟು ಫಲಿತಾಂಶ ದಾಖಲಿಸುತ್ತಿದೆ. ಇದು ಅವರ ಶೈಕ್ಷಣಿಕ ಬದ್ಧತೆ ಮತ್ತು ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಸಾಕ್ಷಿಯಾಗಿದೆ.
ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಗೌರವಕ್ಕೆ ಅವರನ್ನು ಆಯ್ಕೆ ಮಾಡಿದೆ. ವಿವಿಧ ಸಭೆ-ಸಮಾರಂಭಗಳಲ್ಲಿ ಶೈಕ್ಷಣಿಕ ವಿಷಯಗಳ ಕುರಿತು ಉಪನ್ಯಾಸ ನೀಡಿರುವ ಅವರು, ಶಿಕ್ಷಕರಾಗಿ ಮಾತ್ರವಲ್ಲದೆ ಉತ್ತಮ ಮಾರ್ಗದರ್ಶಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಮಮತಾ ಆರ್. ನಾಯ್ಕ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ ದೊರೆತಿರುವುದು ಉತ್ತರಕನ್ನಡ ಜಿಲ್ಲೆಯ ಶಿಕ್ಷಣ ವಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ.
ಇದನ್ನೂ ಓದಿ /30 ನಿಮಿಷದಲ್ಲೇ 42 ಗ್ರಾಂ ಚಿನ್ನದ ಮಾಂಗಲ್ಯ ಸರ ಪತ್ತೆ : ಕುಮಟಾ ಪೊಲೀಸರ ಮಿಂಚಿನ ಕಾರ್ಯಚರಣೆ

