ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ನಗರದ ಕ್ರೀಡಾಪಟುಗಳು, ಮಕ್ಕಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಇದೀಗ ಸೂಕ್ತ ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ತಾಣವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾ ಸಂಕೀರ್ಣದ ಆವರಣದಲ್ಲಿ ಸ್ವಚ್ಛತೆ ಹಾಗೂ ಭದ್ರತಾ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಸಂಕೀರ್ಣದಲ್ಲಿರುವ ಸ್ವಿಮ್ಮಿಂಗ್ ಪೂಲ್ ಸುತ್ತಮುತ್ತ ದುರ್ವಾಸನೆ ಬೀರುತ್ತಿದ್ದು, ಸ್ವಚ್ಛತೆ ಮರೀಚಿಕೆಯಾಗಿದೆ ಎನ್ನಲಾಗಿದೆ. ಪೂಲ್‌ನಲ್ಲಿ ನೀರು ಹಾಗೂ ಲೈಫ್ ಜಾಕೆಟ್‌ಗಳು ಅಸ್ತವ್ಯಸ್ತವಾಗಿ ಬಿದ್ದಿರುವುದು ಕಂಡುಬರುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಪೂಲ್ ಸುತ್ತಮುತ್ತ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದಿರುವುದರಿಂದ ಯಾವುದೇ ಅನಾಹುತ ಸಂಭವಿಸುವ ಆತಂಕವೂ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನು ಕ್ರೀಡಾ ಸಂಕೀರ್ಣದ ಆವರಣದಲ್ಲಿ ಕಸ, ತ್ಯಾಜ್ಯ ಹಾಗೂ ಕೊಳಕು ತುಂಬಿಕೊಂಡಿರುವ ಆರೋಪವೂ ಕೇಳಿಬಂದಿದೆ. ಸಿಗರೇಟ್ ಹಾಗೂ ಬೀಡಿ ತುಂಡುಗಳು, ಮದ್ಯದ ಬಾಟಲಿಗಳು ಪತ್ತೆಯಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದು, ರಾತ್ರಿ ವೇಳೆ ಸಂಕೀರ್ಣದ ಆವರಣ ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಕೆಲವರು ಮಾದಕ ವಸ್ತುಗಳ ಸೇವನೆ ನಡೆಯುತ್ತಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.

ಕ್ರೀಡಾ ಚಟುವಟಿಕೆಗಳಿಗಾಗಿ ನಿರ್ಮಿಸಲಾದ ಸಾರ್ವಜನಿಕ ಸ್ಥಳವೊಂದು ಈ ರೀತಿಯಾಗಿ ನಿರ್ಲಕ್ಷ್ಯಕ್ಕೊಳಗಾಗಿರುವುದು ಬೇಸರದ ಸಂಗತಿ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಕ್ಕಳು, ಮಹಿಳೆಯರು ಹಾಗೂ ಕ್ರೀಡಾಪಟುಗಳು ಸಂಕೀರ್ಣಕ್ಕೆ ಆಗಮಿಸುವ ಸಂದರ್ಭದಲ್ಲಿ ಸುರಕ್ಷತೆಯ ಬಗ್ಗೆ ಆತಂಕ ಎದುರಾಗಿದೆ ಎಂದು ತಿಳಿಸಿದ್ದಾರೆ.

CCTV, ಭದ್ರತಾ ಸಿಬ್ಬಂದಿ ನೇಮಿಸಲು ಆಗ್ರಹ
ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ತಕ್ಷಣವೇ ಸ್ವಚ್ಛತಾ ಕಾರ್ಯ ಕೈಗೊಳ್ಳುವುದರ ಜೊತೆಗೆ, ಸಮರ್ಪಕ ಬೆಳಕಿನ ವ್ಯವಸ್ಥೆ, CCTV ಕ್ಯಾಮೆರಾಗಳ ಅಳವಡಿಕೆ ಹಾಗೂ ಭದ್ರತಾ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಸ್ವಿಮ್ಮಿಂಗ್ ಪೂಲ್‌ನ ಸುರಕ್ಷತಾ ವ್ಯವಸ್ಥೆಯನ್ನೂ ಪರಿಶೀಲಿಸಿ,ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ನಗರಸಭೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಕ್ರೀಡಾ ಸಂಕೀರ್ಣದ ಪ್ರಸ್ತುತ ಸ್ಥಿತಿಗತಿ ಪರಿಶೀಲಿಸಬೇಕು. ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಿಸಲಾಗಿರುವ ಸೌಲಭ್ಯಗಳು ನಿರ್ಲಕ್ಷ್ಯದಿಂದ ಹಾಳಾಗದಂತೆ ಸೂಕ್ತ ನಿರ್ವಹಣಾ ವ್ಯವಸ್ಥೆ ರೂಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಯಾವುದೇ ಅನಾಹುತ ಸಂಭವಿಸುವ ಮುನ್ನವೇ ದಾಂಡೇಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗೆ ಕಾಯಕಲ್ಪ ನೀಡಬೇಕು. ಸಾರ್ವಜನಿಕರ ಸುರಕ್ಷತೆ ಹಾಗೂ ಕ್ರೀಡಾಪಟುಗಳ ಹಿತದೃಷ್ಟಿಯಿಂದ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

ಇದನ್ನೂ ಓದಿ/ ಇಡಗುಂಜಿ ವಿನಾಯಕ ನನ್ನ ಆರಾಧ್ಯ ದೇವರು; ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ನನ್ನ ಧ್ಯೇಯ: ಮಂಕಾಳ ವೈದ್ಯ