ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಜುಲೈ 25ರ ರಾತ್ರಿಯಿಂದ ಜುಲೈ 26 ರ ಬೆಳಿಗ್ಗೆ 5.30 ರ ವರೆಗೆ ರೆಡ್ ಅಲರ್ಟ್ ಇದ್ದು,ಸಾರ್ವಜನಿಕರಿಕೆಯಿಂದ ಇರುವಂತೆ ಎಚ್ಚರಿಕೆಯ ಸೂಚನೆ ನೀಡಲಾಗಿದೆ.
ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗ ಬಾರದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ,ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕಿದೆ.ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕಿದೆ. ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನದಿಯ ದಡದಲ್ಲಿ ಯಾವುದೇ ಸಮಯದಲ್ಲಿ ಪ್ರವಾಹ ಉಂಟಾಗಬಹುದಾದ ಸಾಧ್ಯತೆ ಇರುವುದರಿಂದ ಅಂತಹ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕಿದೆ.
ಮಳೆಯ ಜೊತೆಗೆ ಗಾಳಿ ಕೂಡಾ 35-45 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಕೂಡಾ ಮಳೆಯ ತೀವ್ರತೆಯನುಸಾರ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಗೊಳ್ಳ ಬೇಕು. ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು. ಮತ್ತು ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.
ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಸಂಖ್ಯೆ 08382-229857 ಮತ್ತು ಮೊ.9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಲಂಚಪಡೆದವರಿಗೆ ಜಾಮೀನು ಇಲ್ಲ: ಕಾರವಾರ ಜಿಲ್ಲಾ ನ್ಯಾಯಾಲಯದಿಂದ ಆದೇಶ