ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಊಟ ಮಾಡುವಾಗ ಅನ್ನ ಗಂಟಲಿಗೆ ಸಿಲುಕಿದ ಪರಿಣಾಮ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.
ಮೃತ ಯುವಕನನ್ನು ಬಿಣಗಾ ಮಾಳಸವಾಡದ ಅಮಿತ್ ಮಾಳಸೇರ್ (38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅಮಿತ್, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ.
ಮನೆಯಲ್ಲಿ ಊಟ ಮಾಡುವಾಗ ಅನ್ನ ಗಂಟಲಲ್ಲಿ ಸಿಲುಕಿದ ಪರಿಣಾಮ ತೊಂದರೆ ಅನುಭವಿಸಿದ ಅಮಿತ್, ಮನೆಯವರು ನೀರು ಕುಡಿಸಲು ಪ್ರಯತ್ನಿಸಿದರೂ ತಕ್ಷಣವೇ ಕುಸಿದುಬಿದ್ದಿದ್ದಾನೆ ಕೂಡಲೇ ಆ್ಯಂಬುಲೆನ್ಸ್ ಮೂಲಕ ಕಾರವಾರ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ವೈದ್ಯರು ಪರೀಕ್ಷಿಸಿದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಈ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.