ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ನಗರದ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮೂಲಕ ಅಕ್ರಮವಾಗಿ ಕಾಡುಪ್ರಾಣಿಯ ಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಂಸ ಸಹಿತ ದ್ವಿಚಕ್ರ ವಾಹನ ವಶಕ್ಕೆ ಪಡೆದು ಆರೋಪಿಯನ್ನ ಬಂಧಿಸಿದ್ದಾರೆ.
ನಗರದ ಗ್ರಾಮೀಣ ಪೊಲೀಸ್ ವಸತಿ ಗೃಹದ ಸಮೀಪದ ಬರ್ಚಿ ರಸ್ತೆಯಲ್ಲಿ ದಾಂಡೇಲಿ ತಾಲೂಕಿನ ಕೆರವಾಡ ನಿವಾಸಿ ರಾಜು ಮಂಜು ಪೋತದಾರ ಎಂಬಾತ ದ್ವಿಚಕ್ರ ವಾಹನದಲ್ಲಿ ಕಾಡುಪ್ರಾಣಿಯ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅನುಮಾನಾಸ್ಪದವಾಗಿ ತಡೆದು ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಕಾಡುಪ್ರಾಣಿಯ ಮಾಂಸ ಸಾಗಾಟ ಮಾಡುತ್ತಿರುವುದು ದೃಢಪಟ್ಟಿದೆ.ತಕ್ಷಣವೇ ಆರೋಪಿಯನ್ನು ಬಂಧಿಸಿ, ಮಾಂಸ ಸಹಿತ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು, ವನ್ಯಜೀವಿ ಸಂರಕ್ಷಣಾ ಕಾಯ್ದೆ–1972ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ .
ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಕೆ.ಸಿ. ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಚೌವ್ಹಾಣ್ ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಎನ್.ಎಲ್. ನದಾಪ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಸಂದೀಪ್ ನಾಯ್ಕ, ಲೋಕೇಶ, ಬಸಪ್ಪ ನ್ಯಾಮಗೌಡ, ಜ್ಯೋತಿ ನಂದಿಕೋಡ, ಗಸ್ತು ಅರಣ್ಯ ಪಾಲಕರಾದ ನಾರಾಯಣ ಜುಂಜವಾಡಕರ, ಮೋಹನ ಗೌಡ, ಸವಿತಾ ಹಾಗೂ ಕ್ಷೇಮಾಭಿವೃದ್ಧಿ ನೌಕರ ಚಂದ್ರಶೇಖರ ಮಿರಾಶಿ ಪಾಲ್ಗೊಂಡಿದ್ದರು.


