ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರ ನಿರ್ದೇಶನದಂತೆ ಜನತಾದಳ (ಸೆಕ್ಯುಲರ್) ಪಕ್ಷದ ಉತ್ತರಕನ್ನಡ ಜಿಲ್ಲಾಧ್ಯಕ್ಷರಾಗಿ ಸೂರಜ್ ನಾಯ್ಕ ಸೋನಿ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಕೋರ್ಕಮೀಟಿ ಸದಸ್ಯರಾಗಿದ್ದ ಸೂರಜ್ ನಾಯ್ಕ ಸೋನಿ ಅವರಿಗೆ ಜಿಲ್ಲಾಧ್ಯಕ್ಷರ ಜವಾಬ್ದಾರಿ ನೀಡುವ ಮೂಲಕ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬುವ ಉದ್ದೇಶವಾಗಿದೆ.
ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರ ಆದೇಶದಂತೆ,ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷರಾದ ಎಂ ಕೃಷ್ಣಾರೆಡ್ಡಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಇಂದು ಬೆಂಗಳೂರಿನ ಜೆಡಿಎಸ್ ಕಛೇರಿ ಜೆ ಪಿ ಭವನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ತತ್ವ, ಸಿದ್ಧಾಂತಗಳನ್ನು ಜನಸಾಮಾನ್ಯರ ನಡುವೆ ತಲುಪಿಸುವಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಹೊಣೆಗಾರಿಕೆಯನ್ನು ಸೂರಜ್ ನಾಯ್ಕ ಸೋನಿ ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ತಮ ವಾಗ್ಮಿತ್ವ, ಸಂಘಟನಾ ಚಾತುರ್ಯ ಮತ್ತು ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಸೂರಜ್ ನಾಯ್ಕ ಸೋನಿ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಪುನರ್ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಪಕ್ಷ ನಾಯಕರು ವ್ಯಕ್ತಪಡಿಸಿದ್ದಾರೆ. ಸೂರಜ್ ನಾಯ್ಕ ಸೋನಿ ಅವರ ನೇಮಕಕ್ಕೆ ಜಿಲ್ಲಾಧ್ಯಂತ ಪಕ್ಷದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಎಲ್ಲಾ ನನ್ನ ಪ್ರೀತಿಯ ಕಾರ್ಯಕರ್ತರಿಗೂ ನನ್ನ ಹೃದಯಾಂತರಾಳದ ಧನ್ಯವಾದ ಎಂದು ಸೂರಜ್ ನಾಯ್ಕ ಸೋನಿ
ಹೇಳಿದ್ದಾರೆ.
ಇದನ್ನೂ ಓದಿ/Reels-Queen/ರೀಲ್ಸ್ ರಾಣಿ ಸಂಪರ್ಕದಲ್ಲಿದ್ದವರಿಗೆ ಢವಢವ,..ಪಡ್ಡೆ ಯುವಕರು ಅಂಡರ್ ಗ್ರೌಂಡ್ಗೆ..!


