ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯ ಸರ್ಕಾರ ಮಂಡಿಸಿರುವ ಪ್ರಸಕ್ತ ಬಜೆಟ್ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಸೀಮಿತವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕ್ಷೇತ್ರಗಳಾದ ಮೀನುಗಾರಿಕೆ, ಕೃಷಿ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ,ಆಸ್ಪತ್ರೆ ನಿರ್ಮಾಣಕ್ಕೆ ಇನ್ನೂ ಸೂಕ್ತ ಸ್ಥಳವನ್ನು ಗುರುತಿಸದಿರುವುದು ಬೇಸರದ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಈಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೇ ತಜ್ಞ ವೈದ್ಯರು ಹಾಗೂ ಅತ್ಯಾಧುನಿಕ ಯಂತ್ರೋಪಕರಣಗಳ ಕೊರತೆ ಇರುವುದರಿಂದ ಜನರಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಬದಲು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ ಎಂದು ಉಳ್ವೇಕರ್ ಟೀಕಿಸಿದರು. ರಾಜ್ಯದ ಒಟ್ಟು ಸಾಲವು 8.24 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದ್ದು, ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮೇಲೂ ಸರಾಸರಿ 1.17 ಲಕ್ಷ ರೂಪಾಯಿಗಳ ಸಾಲದ ಹೊರೆ ಬಿದ್ದಿದೆ.2024ರಿಂದ 2027ರವರೆಗೆ ಲಕ್ಷಾಂತರ ಕೋಟಿ ರೂಪಾಯಿಗಳ ಸಾಲದ ಸುರುಳಿಯನ್ನು ಸೃಷ್ಟಿಸುತ್ತಿರುವ ಸರ್ಕಾರದ ನಡೆ ಕನ್ನಡಿಗರ ಭವಿಷ್ಯಕ್ಕೆ ಮಾರಕವಾಗಿದೆ.

ಆರ್ಥಿಕ ತಜ್ಞ ಎಂದು ಕರೆಸಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಜವಾದ ಸಾಧನೆ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೆಚ್ಚಿಸಿರುವುದೇ ಆಗಿದೆ ಎಂದು ಅವರು ಕಟುವಾಗಿ ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ/ಇದೊಂದು ಸಾಲದ ಬಜೆಟ್, ಸರ್ಕಾರ ದಿವಾಳಿಯಾಗಿದೆ:ರೂಪಾಲಿ ನಾಯ್ಕ