
ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಉತ್ತರ ಕನ್ನಡ ಜಿಲ್ಲೆಯ ಪಾಲಿಗೆ ಕೇವಲ ಬೋಗಸ್ ಆಗಿದ್ದು, ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರವಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ತೀವ್ರವಾಗಿ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಿಗಾಗಿ ಘೋಷಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೇವಲ 100 ಕೋಟಿ ರೂಪಾಯಿಗಳಲ್ಲೇ ನಿರ್ಮಾಣವಾಗುತ್ತದೆ ಎಂದು ಹೇಳಿರುವುದು ಅಸಂಭವವಾಗಿದೆ ಎಂದು ಹೇಳಿದರು. ಇಂದು ಒಂದು ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲು 10 ರಿಂದ 20 ಕೋಟಿ ರೂಪಾಯಿ ಬೇಕಾಗುತ್ತದೆ. ಅಂಥ ಪರಿಸ್ಥಿತಿಯಲ್ಲಿ ನೂರು ಕೋಟಿ ರೂಪಾಯಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ. ಆಸ್ಪತ್ರೆಯಲ್ಲಿ ಎಷ್ಟು ಹಾಸಿಗೆಗಳು ಇರುತ್ತವೆ, ಕಾರ್ಡಿಯಾಲಜಿ ಅಥವಾ ನೆಫ್ರಾಲಜಿ ವಿಭಾಗಗಳಿರುತ್ತವೆಯೇ ಎಂಬ ಯಾವುದೇ ಸ್ಪಷ್ಟತೆ ಬಜೆಟ್ನಲ್ಲಿ ಇಲ್ಲ ಎಂದು ಆರೋಪಿಸಿದರು.
ಸುಮಾರು 400 ಕೋಟಿ ರೂಪಾಯಿ ವೆಚ್ಚವಾಗುವ ಯೋಜನೆಗೆ ಕೇವಲ 100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾದ ಚುನಾವಣಾ ಗಿಮಿಕ್ ಮಾತ್ರ ಎಂದು ಕಿಡಿಕಾರಿದರು.ಕಾರವಾರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕ್ರೆಡಿಟ್ ಪಡೆಯಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸುತ್ತಿದೆ.ಆದರೆ ಈ ಕಟ್ಟಡವು ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ವಿಶೇಷ ಪ್ರಯತ್ನ ಹಾಗೂ 2021ರಲ್ಲಿ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಮಂಜೂರಾದ 166 ಕೋಟಿ ರೂಪಾಯಿ ಅನುದಾನದಿಂದ ನಿರ್ಮಾಣಗೊಂಡಿದೆ. ಇದಕ್ಕೆ ಕೇಂದ್ರ ಸರ್ಕಾರವೂ 16 ಕೋಟಿ ರೂಪಾಯಿ ನೀಡಿದೆ. ಈಗ ಸಿದ್ಧಗೊಂಡ ಕಟ್ಟಡವನ್ನು ಉದ್ಘಾಟಿಸಿ ತಮ್ಮದೇ ಸಾಧನೆ ಎಂದು ಕಾಂಗ್ರೆಸ್ ನಾಯಕರು ಬಿಂಬಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಆಸ್ಪತ್ರೆಯನ್ನು ಉದ್ಘಾಟಿಸಿ ತಮ್ಮದೇ ಸಾಧನೆ ಎಂಬಂತೆ ಪ್ರಚಾರ ಮಾಡುತ್ತಿದ್ದಾರೆ. ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ 100 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸುವ ಮೂಲಕ ಜನರ ಕಣ್ಣಿಗೆ ಮಣ್ಣೆರೆಚುವ ತಂತ್ರ ನಡೆಸುತ್ತಿದ್ದಾರೆ. ಇದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಮಾಡಲಾದ ಘೋಷಣೆ ಎಂದು ದೂರಿದರು.
ಶಿರಸಿಯಲ್ಲಿ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಯತ್ನದಿಂದ 142ಕೋಟಿ ರೂಪಾಯಿ ವೆಚ್ಚದ ಆಸ್ಪತ್ರೆ ಕಾಮಗಾರಿ ಶೇ.80ರಷ್ಟು ಪೂರ್ಣಗೊಂಡಿದೆ. ಆದರೆ ಕಳೆದ ಒಂದೂವರೆ ವರ್ಷಗಳಿಂದ ಸರ್ಕಾರ ವೈದ್ಯರ ನೇಮಕಾತಿ ಮಾಡಿಲ್ಲ. ವೈದ್ಯಕೀಯ ಉಪಕರಣಗಳಿಗೆ ಮೀಸಲಿದ್ದ 30 ಕೋಟಿ ರೂಪಾಯಿಯನ್ನು 5ಕೋಟಿಗೆ ಇಳಿಸಿ ಎಂಆರ್ಐ ಮತ್ತು ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಕಿತ್ತುಕೊಳ್ಳಲಾಗಿದೆ. ಈ ಬಜೆಟ್ನಲ್ಲಿ ಶಿರಸಿ ಆಸ್ಪತ್ರೆಗೂ ಯಾವುದೇ ಹೊಸ ಅನುದಾನ ಘೋಷಣೆ ಮಾಡಿಲ್ಲ ಎಂದು ಹೇಳಿದರು.
ಇದಕ್ಕೂ ಮುನ್ನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕುಮಟಾದಲ್ಲಿ ಘೋಷಣೆಯಾದ ಆಸ್ಪತ್ರೆಗೆ ಹಣ ನೀಡದೇ,ಈಗ ಹೊಸದಾಗಿ ಆಸ್ಪತ್ರೆ ಮಾಡುತ್ತೇವೆ ಎನ್ನುವುದು ಜನರನ್ನು ಮರುಳು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.ಉತ್ತರ ಕನ್ನಡ ಜಿಲ್ಲೆಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲ. ರೈತ ವಲಯಕ್ಕೂ ಯಾವುದೇ ಉಪಯುಕ್ತ ಘೋಷಣೆಗಳಿಲ್ಲ.ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ಬೆಳೆಗಾರರು ಎಲೆಚುಕ್ಕೆ ರೋಗದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಸಮಸ್ಯೆ ನಿವಾರಣೆಗೆ ಯಾವುದೇ ಪ್ರತ್ಯೇಕ ಅನುದಾನ ನೀಡಿಲ್ಲ ಎಂದು ಹೇಳಿದರು.
ಅಡಿಕೆ ಬೆಳೆಗಳಲ್ಲಿ ಕಂಡುಬರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ ಕೋಳೆ ರೋಗಗಳ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮಾತ್ರ ಹೇಳಲಾಗಿದೆ. ತೆಂಗಿನ ಬೆಳೆಗೆ ಮಾರಕವಾಗಿರುವ ಕಪ್ಪುತಲೆ ಹುಳು ಮತ್ತು ಬಿಳಿ ನೊಣಗಳ ಹಾವಳಿಯನ್ನು ತಡೆಯಲು ಸಮುದಾಯ ಆಧಾರಿತ ಕಾರ್ಯಕ್ರಮಕ್ಕೆ ಕೇವಲ 10ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆದರೆ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಯಾವುದೇ ಸ್ಪಷ್ಟ ಕ್ರಮಗಳು ಬಜೆಟ್ನಲ್ಲಿ ಇಲ್ಲ ಎಂದು ಅನಂತಮೂರ್ತಿ ಹೆಗಡೆ ಆರೋಪಿಸಿದರು.
ಇದನ್ನೂ ಓದಿ/ಬಜೆಟ್ ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತ, ಅಭಿವೃದ್ಧಿ ಶೂನ್ಯ: MLC ಗಣಪತಿ ಉಳ್ವೇಕರ್

