ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದು, ಉತ್ತರ ಕನ್ನಡ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸೂರಜ್ ನಾಯ್ಕ ಸೋನಿ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಜಿಲ್ಲೆಯಲ್ಲಿ 100ಕೋಟಿ ರೂಪಾಯಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಘೋಷಿಸಿರುವುದು ಜನರ ಕಣ್ಣೊರೆಸುವ ತಂತ್ರವೇ ಹೊರತು ಶಾಶ್ವತ ಪರಿಹಾರವಲ್ಲ ಎಂದು ಆರೋಪಿಸಿದರು.ಕೇವಲ ಕಟ್ಟಡ ನಿರ್ಮಿಸುವುದರಿಂದ ಮಾತ್ರ ಸಾಲದು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಿ, ನುರಿತ ತಜ್ಞ ವೈದ್ಯರನ್ನು ನೇಮಕಗೊಳಿಸುವ ಅಗತ್ಯವಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಎದುರಾದಾಗ ಜನರು ದೂರದ ಜಿಲ್ಲೆಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಇದೆ. ಕೆಲವೊಮ್ಮೆ ಮಾರ್ಗ ಮಧ್ಯೆಯೇ ಸಾವು ಸಂಭವಿಸುವ ಘಟನೆಗಳೂ ನಡೆಯುತ್ತಿವೆ. ಹೀಗಾಗಿ ಜಿಲ್ಲೆಯನ್ನು ಆರೋಗ್ಯದ ದೃಷ್ಟಿಯಿಂದ ವಿಶೇಷವಾಗಿ ಪರಿಗಣಿಸಿ ಸಮಗ್ರ ಯೋಜನೆ ರೂಪಿಸಬೇಕಾಗಿತ್ತು ಎಂದು ಅವರು ಅಭಿಪ್ರಾಯಪಟ್ಟರು.

100 ಕೋಟಿ ರೂಪಾಯಿ ಅನುದಾನದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನೇ ಒದಗಿಸಲು ಸಾಧ್ಯವಾಗದಿದ್ದರೆ, ಈ ಯೋಜನೆಯಿಂದ ಜನರಿಗೆ ಏನು ಪ್ರಯೋಜನ ಎನ್ನುವ ಪ್ರಶ್ನೆ ಮೂಡುತ್ತದೆ.ಆಸ್ಪತ್ರೆಯಲ್ಲಿ ವೈದ್ಯರ ನೇಮಕಾತಿಗೆ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಆರೋಗ್ಯ ಸೇವೆಯನ್ನು ಬಲಪಡಿಸಬೇಕಾಗಿತ್ತು.ಆದರೆ ಈ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಸ್ಪಷ್ಟ ಕ್ರಮಗಳಿಲ್ಲ ಎಂದು ಅವರು ದೂರಿದರು.

ಉತ್ತರ ಕನ್ನಡ ಜಿಲ್ಲೆ ಕೃಷಿ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದರೂ, ಈ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ದೊಡ್ಡ ಮಟ್ಟದ ಘೋಷಣೆಗಳಿಲ್ಲ. ಇದು ಆಶಾದಾಯಕ ಬಜೆಟ್ ಆಗಿ ಕಂಡುಬರುವುದಿಲ್ಲ.

ಕಾರವಾರದಲ್ಲಿ ಈಗಾಗಲೇ 198 ಕೋಟಿ ರೂಪಾಯಿ ವೆಚ್ಚದ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆಗೊಂಡಿದ್ದು, ಇದೀಗ ಮತ್ತೆ 100 ಕೋಟಿ ರೂಪಾಯಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ ಮಾಡಲಾಗಿದೆ. ಇದಲ್ಲದೆ ತದಡಿ ಪ್ರದೇಶದಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಿದ್ದಾಪುರ ಮತ್ತು ಶಿರಸಿ ತಾಲೂಕುಗಳಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ ಘೋಷಣೆಗಳನ್ನೇ ಬಿಟ್ಟರೆ ಜಿಲ್ಲೆಗೆ ಇನ್ನಾವುದೇ ಮಹತ್ವದ ಕೊಡುಗೆ ನೀಡಿಲ್ಲ ಎಂದು ಅವರು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ 17ನೇ ಬಜೆಟ್ ಮಂಡಿಸಿದ ಸಂತೋಷ ಇದ್ದರೂ, ಜನರಿಗೆ ನಿರಾಸೆಯೇ ಎದುರಾಗಿದೆ. ರಾಜ್ಯದಲ್ಲಿ ಆದಾಯ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿಯಾಗಿದ್ದು,ಅನುದಾನ ಹಂಚಿಕೆಯಲ್ಲಿ ತಾಳಮೇಳ ಕಾಣಿಸುತ್ತಿಲ್ಲ. ಈ ಬಜೆಟ್ ನಿರೀಕ್ಷೆ ಹುಟ್ಟುಹಾಕಿ ಕೊನೆಯಲ್ಲಿ ನಿರಾಸೆ ಮೂಡಿಸಿದೆ ಎಂದು ಸೂರಜ್ ನಾಯ್ಕ ಸೋನಿ ತಿಳಿಸಿದ್ದಾರೆ.

ಇದನ್ನೂ ಓದಿ/ಉತ್ತರ ಕನ್ನಡ ಜಿಲ್ಲೆಯ ದಶಕಗಳ ಕನಸು ನನಸು: ಸಿಎಂ ಬಜೆಟ್‌ಗೆ ಶಾಸಕ‌ ಭೀಮಣ್ಣ ಟಿ. ನಾಯ್ಕ ಮೆಚ್ಚುಗೆ