ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಮಧ್ಯಪ್ರಾಚ್ಯ ದೇಶಗಳ ನಡುವೆ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಪರಿಣಾಮ ಇದೀಗ ಕರಾವಳಿ ಭಾಗಕ್ಕೂ ತಟ್ಟಿದ್ದು, ಕಾರವಾರದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಕಾಣಿಸಿಕೊಂಡಿದೆ. ಇದರಿಂದ ನಗರದ ಹಲವಾರು ಹೊಟೇಲ್‌ಗಳು ತಮ್ಮ ಸೇವೆಯನ್ನು ಕಡಿತಗೊಳಿಸುವ ಪರಿಸ್ಥಿತಿ ಎದುರಾಗಿದೆ.

ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ಉಂಟಾದ ತೊಂದರೆಯಿಂದಾಗಿ ಹಲವಾರು ಹೊಟೇಲ್ ಮಾಲಿಕರು ಚೈನೀಸ್ ಫುಡ್, ರೊಟ್ಟಿ ಸೇರಿದಂತೆ ಕೆಲವು ಪದಾರ್ಥಗಳ ತಯಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಈಗ ಕೇವಲ ಊಟ (ಮೀಲ್ಸ್) ಮಾತ್ರ ನೀಡಲಾಗುತ್ತಿದೆ. ಇದರಿಂದ ಕಾರವಾರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರಿಗೆ ಬೇಕಾದ ಆಹಾರ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರವಾಸೋದ್ಯಮಕ್ಕೆ ಪ್ರಸಿದ್ಧಿಯಾದ ಕಾರವಾರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವ ಈ ಸಮಯದಲ್ಲಿ ಆಹಾರ ಸೇವೆಯಲ್ಲಿ ಉಂಟಾದ ಈ ಸಮಸ್ಯೆ ಪ್ರವಾಸೋದ್ಯಮದ ಮೇಲೂ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಕುರಿತು ಹೊಟೇಲ್ ಮಾಲಿಕರು ಮಾತನಾಡಿ, “ವಾಣಿಜ್ಯ ಗ್ಯಾಸ್ ಸಿಲಿಂಡರ್ ಸರಬರಾಜು ಸರಿಯಾಗಿ ಆಗದ ಕಾರಣ ಹಲವು ಆಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಹೊಟೇಲ್‌ಗಳನ್ನು ಮುಚ್ಚುವ ಪರಿಸ್ಥಿತಿಯೂ ಬರಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಯುದ್ಧ ಪರಿಸ್ಥಿತಿ ಮುಂದುವರೆದರೆ ಗ್ಯಾಸ್ ಸರಬರಾಜಿನ ಸಮಸ್ಯೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ಇದರಿಂದ ಹೊಟೇಲ್ ಉದ್ಯಮ ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರಕ್ಕೂ ಸಂಕಷ್ಟ ಎದುರಾಗುವ ಭೀತಿ ವ್ಯಕ್ತವಾಗುತ್ತಿದೆ.