ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಬಿಜೆಪಿ ಮುಖಂಡ ಮಾಸ್ತಪ್ಪ ನಾಯ್ಕ ಅವರು ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳು ವೈದ್ಯ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದು, ಇದು ಕಳೆದ ಕೆಲವು ತಿಂಗಳುಗಳಿಂದ ರೂಪಿಸಲಾದ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ. ಮತ್ತು ಮಾಸ್ತಪ್ಪ ನಾಯ್ಕ ಹೇಳುತ್ತಿರುವುದು ಎಲ್ಲವೂ ಬರೀ ಸುಳ್ಳು ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾವಂಕರ ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅನುದಾನಗಳಿಂದ ಬಿಜೆಪಿ ನಾಯಕರು ಗಲಿಬಿಲಿಗೊಂಡಿದ್ದಾರೆ. ಜಿಲ್ಲೆಯಲ್ಲಿ ರಾಜಕೀಯ ನೆಲೆ ಕಳೆದುಕೊಂಡ ಹತಾಶೆಯಲ್ಲಿ ಮಾಂಕಾಳು ವೈದ್ಯ ಅವರ ವಿರುದ್ಧ ಒಂದಲ್ಲ ಒಂದು ರೀತಿಯಲ್ಲಿ ಆರೋಪ ಮಾಡುತ್ತಿದ್ದು, ಅದರ ಮುಂದುವರೆದ ಭಾಗವಾಗವೇ
ಮಾಸ್ತಪ್ಪ ನಾಯ್ಕ ಅವರ ಹೇಳಿಕೆಗಳು ಕೂಡ ಸೇರಿವೆ ಎಂದು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತು ಇತರ ರಾಜ್ಯಗಳು ಹಾಗೂ ದೇಶಗಳ ಉದಾಹರಣೆಗಳನ್ನು ಮಾತ್ರ ನೀಡಿದ್ದಾರೆ ವಿನಹಃ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದಲ್ಲದೆ, ಈ ಯೋಜನೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಸಚಿವ ಸಂಪುಟದಲ್ಲಿ ಚರ್ಚೆಯಾಗಿ ಅನುಮೋದನೆ ಪಡೆದಿರುವುದಾಗಿ ಭಟ್ಕಳದ ಬಿಜೆಪಿಯ ಮಾಜಿ ಶಾಸಕ ಸುನೀಲ ನಾಯ್ಕ್ ಸ್ವತಃ ಒಪ್ಪಿಕೊಂಡಿದ್ದಾರೆ. ಹೀಗಿರುವಾಗ ಬಿಜೆಪಿ ನಾಯಕರು ಮಾಂಕಾಳು ವೈದ್ಯ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಗಾಂವ್ಕರ್ ಹೇಳಿದ್ದಾರೆ.
ಉಪಮುಖ್ಯಮಂತ್ರಿಗಳು ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತು ಪಾಸಿಟಿವ್ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಜಿಲ್ಲೆಯ ಸಚಿವರು ಮತ್ತು ಶಾಸಕರ ನಿಯೋಗ ಭೇಟಿ ನೀಡಿ ಯೋಜನೆಯ ಸಾಧಕ–ಬಾಧಕಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಅಲ್ಲದೆ ದೆಹಲಿಯವರೆಗೂ ನಿಯೋಗ ತೆರಳಿ ಎಲ್ಲ ಹಂತಗಳಲ್ಲಿ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿ ಹೋರಾಟವಾಗಲಿ ಅಥವಾ ಬೇಡ್ತಿ ನದಿ ತಿರುವು ವಿರೋಧಿ ಹೋರಾಟವಾಗಲಿ, ಇವು ಸಾರ್ವಜನಿಕ ಹಿತ ಮತ್ತು ಪರಿಸರ ಸಂರಕ್ಷಣೆಯ ಉದ್ದೇಶದಿಂದ ಜಿಲ್ಲೆಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಗಳಾಗಿದ್ದು, ಯಾವುದೇ ರಾಜಕೀಯ ಪಕ್ಷದ ಹೋರಾಟಗಳಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.ಜಿಲ್ಲೆಯ ಪರಿಸರ ಮತ್ತು ಜನಜೀವನದ ಮೇಲೆ ದುಷ್ಪರಿಣಾಮ ಬೀರುವಂತಹ ಯಾವುದೇ ಯೋಜನೆಗಳಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುವುದಿಲ್ಲ. ಈ ಯೋಜನೆಗಳೆಲ್ಲವೂ ಬಿಜೆಪಿ ಆಡಳಿತಾವಧಿಯಲ್ಲೇ ಜಿಲ್ಲೆಗೆ ಬಂದಿವೆ ಎಂದು ಸಾಯಿ ಗಾವಂಕರ ತಿಳಿಸಿದ್ದಾರೆ.
ಇದನ್ನೂ ಓದಿ/ಯುದ್ಧದ ನಡುವೆ ಕಾರವಾರ ಬಂದರಿಗೆ ಯುಎಇಯಿಂದ ಬಿಟುಮಿನ್ ಹೊತ್ತು ಬಂದ ಹಡಗು



