ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಕೆರವಾಡಾ ಪ್ರದೇಶದಲ್ಲಿರುವ ಶ್ರೇಯಸ್ ಪೇಪರ್ ಮಿಲ್‌ನಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕಂಪನಿ ಆವರಣದಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ಹಚ್ಚಿದ ಪರಿಣಾಮ ಅದು ನಿಯಂತ್ರಣ ತಪ್ಪಿ ಮಿಲ್ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದೆ. ದಟ್ಟ ಹೊಗೆ ಆವರಿಸಿಕೊಂಡಿತ್ತು. ಇದರಿಂದ‌, ಹತ್ತಿರದ ಅರಣ್ಯ ಪ್ರದೇಶಕ್ಕೂ ಬೆಂಕಿ ತಗುಲುವ ಭೀತಿ ಉಂಟಾಗಿತ್ತು.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಹಳಿಯಾಳ ಹಾಗೂ ಜೊಯಿಡಾ ಭಾಗಗಳಿಂದ ಕೂಡ ಹೆಚ್ಚುವರಿಯಾಗಿ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಗಿದೆ. ಸ್ಥಳಕ್ಕೆ ತಹಶೀಲ್ದಾರ ಶೈಲೇಶ್ ಪರಮಾನಂದ ಹಾಗೂ ಸಿ.ಪಿ.ಐ ಶಿವಾನಂದ ಅಂಬಿಗೇರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬೆಂಕಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೊಂದೆಡೆ, ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಿರುವ ಸ್ಥಳೀಯರು ಕಂಪನಿ ಮಾಲೀಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸರ ಹಾಗೂ ಜನರ ಸುರಕ್ಷತೆಯನ್ನು ಪಣಕ್ಕಿಟ್ಟು ತ್ಯಾಜ್ಯ ನಿರ್ವಹಣೆ ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ.ಯಶಸ್ವಿನಿ ಆರೋಗ್ಯ ಯೋಜನೆ: ಹಣ ಕೊಟ್ಟರೂ ಚಿಕಿತ್ಸೆ ಇಲ್ಲ:ಕೋಟಿ ಕೋಟಿ ಸಂಗ್ರಹದ ಹಿಂದೆ ಭಾರೀ ಹಗರಣದ ವಾಸನೆ..!