ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ತಾಲೂಕಿನ ವಂದೂರು ಸಮೀಪದ ಜಡಿಗದ್ದೆ ಪ್ರದೇಶದಲ್ಲಿ ಗೋವನ್ನು ಕೊಂದು ಅದರ ಮಾಂಸವನ್ನು ಕಳವು ಮಾಡಿಕೊಂಡು ಹೋಗಿರುವ ದುರುಳರ ಕೃತ್ಯ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ವಂದೂರು ಗ್ರಾಮದ ಜಡಿಗದ್ದೆಯಲ್ಲಿರುವ ಗೇರು ತೋಟದಲ್ಲಿ ಈ ಘಟನೆ ನಡೆದಿದ್ದು, ಗಣಪತಿ ಮಹಾಬಲೇಶ್ವರ ಭಟ್ ಅವರಿಗೆ ಸೇರಿದ ದನವನ್ನು ದುಷ್ಕರ್ಮಿಗಳು ಕ್ರೂರವಾಗಿ ಕೊಂದು ಅದರ ಮಾಂಸವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಹೊನ್ನಾವರ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿ, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ.
ಈ ಘಟನೆ ಸ್ಥಳೀಯರಲ್ಲಿ ಭೀತಿ ಉಂಟುಮಾಡಿದ್ದು, ಇಂತಹ ಕೃತ್ಯಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

