ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಮುಖ್ಯಮಂತ್ರಿ ಹುದ್ದೆಗೆ ಏರಲಿರುವ ಕೆಪಿಸಿಸಿ ಅಧ್ಯಕ್ಷ D. K. Shivakumar ಅವರಿಂದ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಕುತೂಹಲ ತಾರಕಕ್ಕೇರಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹಿರಿಯ ನಾಯಕ B. K. Hariprasad ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗುತ್ತಿದೆ. ಪಕ್ಷ ಸಂಘಟನೆಯಲ್ಲಿ ದೀರ್ಘ ಅನುಭವ ಹೊಂದಿರುವ ಹರಿಪ್ರಸಾದ್ ಅವರಿಗೆ ಅವಕಾಶ ನೀಡುವ ಬಗ್ಗೆ ಡಿಕೆ ಶಿವಕುಮಾರ್ ಕೂಡ ಹೆಚ್ಚಿನ ಒಲವು ತೋರಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತಿವೆ. ಹರಿಪ್ರಸಾದ್ ಅವರು ಹಿಂದುಳಿದ ವರ್ಗದ ಪ್ರಮುಖ ನಾಯಕರಾಗಿರುವುದರಿಂದ, ರಾಜ್ಯದ ವಿವಿಧ ಸಮುದಾಯಗಳಿಗೆ ಸಮತೋಲನ ಸಾಧಿಸುವ ದೃಷ್ಟಿಯಿಂದಲೂ ಅವರ ಹೆಸರನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಲವಾದ ಆಕಾಂಕ್ಷಿಯಾಗಿ ಪರಿಗಣಿಸಲ್ಪಟ್ಟಿದ್ದ Satish Jarkiholi ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳಿದ್ದರೂ, ಅವರು ಈ ಹುದ್ದೆ ಸ್ವೀಕರಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಎನ್ನಲಾಗಿದೆ. ಸರ್ಕಾರ ಮತ್ತು ಸಂಘಟನೆಯ ಜವಾಬ್ದಾರಿಗಳನ್ನು ಒಟ್ಟಿಗೆ ನಿರ್ವಹಿಸುವ ಬದಲು ತಮ್ಮ ಪ್ರಸ್ತುತ ರಾಜಕೀಯ ಕಾರ್ಯಚಟುವಟಿಕೆಗಳ ಮೇಲೆಯೇ ಗಮನ ಹರಿಸಲು ಅವರು ಬಯಸಿದ್ದಾರೆನ್ನಲಾಗಿದೆ. ಹೀಗಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಘೋಷಣೆ ಆಗುತ್ತಿದ್ದಂತೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರ ನೇಮಕವೇ ಕಾಂಗ್ರೆಸ್ ಹೈಕಮಾಂಡ್ನ ಮುಂದಿರುವ ಪ್ರಮುಖ ಆಯ್ಕೆಯಾಗಿದೆ. ಆದರೆ ಅಂತಿಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವವೇ ಕೈಗೊಳ್ಳಲಿದ್ದು, ಮುಂದಿನ ಕೆಲ ದಿನಗಳಲ್ಲಿ ಈ ಕುರಿತು ಮಹತ್ವದ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಕಾಂಗ್ರೆಸ್ನೊಳಗಿನ ಮತ್ತೊಂದು ಹೈವೋಲ್ಟೇಜ್ ರಾಜಕೀಯ ಕಸರತ್ತಿಗೆ ವೇದಿಕೆಯಾಗಿದ್ದು, ಬಿ.ಕೆ. ಹರಿಪ್ರಸಾದ್ ಹೆಸರು ಈಗ ಮುಂಚೂಣಿಯಲ್ಲಿ ಇರೋದು ಮಾತ್ರ ಅತ್ಯ.
ಇದನ್ನೂ ಓದಿ/ಮೀನುಗಾರಿಕಾ ಬೋಟ್ ಮುಳುಗಡೆ : ಏಳು ಮೀನುಗಾರರ ರಕ್ಷಣೆ

