ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಜಿಲ್ಲಾ ಆಸ್ಪತ್ರೆಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಿಸುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ. ಜಿಲ್ಲಾ ಆಸ್ಪತ್ರೆ ಕಾರವಾರದಲ್ಲೇ ಮುಂದುವರಿಯಬೇಕು. ಬೇರೆಡೆಗೆ ತೆಗೆದುಕೊಂಡು ಹೋದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಮಾಧವ ನಾಯ್ಕ ಎಚ್ಚರಿಕೆ ನೀಡಿದರು.
ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರವಾರದಲ್ಲಿ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜು ಇದ್ದರೂ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಯಂತ್ರ ಬಂದು ಸುಮಾರು ಎರಡುವರೆ ವರ್ಷಗಳಾಗಿದ್ದರೂ ಅದರ ಪೂರ್ಣ ಪ್ರಮಾಣದ ಬಳಕೆ ಆಗುತ್ತಿಲ್ಲ. ಹಣ ಪಾವತಿಸುವವರಿಗೆ ಮಾತ್ರ ಸಿಟಿ ಸ್ಕ್ಯಾನ್ ಸೇವೆ ಲಭ್ಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಅಲ್ಲದೆ ಆಸ್ಪತ್ರೆಯಲ್ಲಿ ಅಂಬುಲೆನ್ಸ್ಗಳ ಕೊರತೆಯೂ ತೀವ್ರವಾಗಿದೆ ಎಂದು ಅವರು ಹೇಳಿದರು.
ಉಚಿತವಾಗಿ ಎಂಆರ್ಐ ಪರೀಕ್ಷೆ ಮಾಡಿಸಿಕೊಳ್ಳಬೇಕಾದರೆ ರೋಗಿಗಳು ಉಡುಪಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರವಾರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಹೆರಿಗೆ ಸಮಯದಲ್ಲಿ ಕೊನೆಯ ಕ್ಷಣದಲ್ಲಿ ಸಮಸ್ಯೆ ಇದೆ ಎಂದು ಹೇಳಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಆಸ್ಪತ್ರೆಯಲ್ಲಿನ ವಿವಿಧ ಸಮಸ್ಯೆಗಳ ಬಗ್ಗೆ ಹಿಂದಿನ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ವೈದ್ಯಕೀಯ ಕಾಲೇಜಿಗೆ ಪರಿಣಿತ ವೈದ್ಯರು ಬರಲು ಆಸಕ್ತಿ ತೋರಿಸುತ್ತಿಲ್ಲ. ಇದರ ಪರಿಣಾಮವಾಗಿ ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಅವರು ದೂರಿದರು. ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ವೈದ್ಯರ ನೇಮಕಾತಿ, ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಸೇರಿದಂತೆ ಅಗತ್ಯ ಸೌಲಭ್ಯಗಳ ಸಮರ್ಪಕ ಬಳಕೆ ಮತ್ತು ಅಂಬುಲೆನ್ಸ್ ವ್ಯವಸ್ಥೆ ಬಲಪಡಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಜಿಲ್ಲಾ ಆಸ್ಪತ್ರೆಯನ್ನು ಕಾರವಾರದಲ್ಲೇ ಉಳಿಸಿ, ಆರೋಗ್ಯ ಸೇವೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಮಾಧವ ನಾಯ್ಕ ಒತ್ತಾಯಿಸಿದರು

