ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪ್ರವಾಸಿಗರು ತೆರಳುತ್ತಿದ್ದ ವಾಹನದ ಮೇಲೆ ಬೃಹತ್ ಮಾವಿನ ಮರ ಉರುಳಿ ಬಿದ್ದು ವಾಹನದಲ್ಲಿ ಇದ್ದ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಗೋಕರ್ಣ–ಮಾದನಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಹಿತ್ತಲಮಕ್ಕಿ ಬಳಿ ಏಕಾಏಕಿ ರಸ್ತೆ ಪಕ್ಕದಲ್ಲಿದ್ದ ಭಾರೀ ಗಾತ್ರದ ಮಾವಿನ ಮರ ಮುರಿದು ಬಿದ್ದು, ಆ ಸಮಯದಲ್ಲಿ ಸಾಗುತ್ತಿದ್ದ ಪ್ರವಾಸಿ ವಾಹನದ ಮೇಲೆ ಬಿದ್ದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಪ್ರವಾಸಿಗರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಮರ ರಸ್ತೆಯ ಮಧ್ಯಭಾಗಕ್ಕೆ ಉರುಳಿ ಬಿದ್ದ ಪರಿಣಾಮ ಮಾದನಗೇರಿ–ಗೋಕರ್ಣ ಮಾರ್ಗದಲ್ಲಿ ಕೆಲ ಗಂಟೆಗಳ ಸಮಯ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು.ಇದರಿಂದ ಸ್ಥಳೀಯರು ಹಾಗೂ ಪ್ರವಾಸಿಗರು ಸಾಕಷ್ಟು ಪರದಾಡುವಂತಾಯಿತು.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ರಸ್ತೆಯಲ್ಲಿ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದ್ದಾರೆ. ಸ್ಥಳೀಯರ ಪ್ರಯತ್ನದಿಂದಾಗಿ ರಸ್ತೆ ಮೇಲಿದ್ದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಮರ ತೆರವು ಕಾರ್ಯ ಪೂರ್ಣಗೊಂಡ ನಂತರ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಪುನರಾರಂಭಗೊಂಡಿದ್ದು, ಪ್ರಯಾಣಿಕರು ನಿರಾಳವಾಗಿ ಸಂಚರಿಸುವಂತಾಯಿತು.
ಇದನ್ನೂ ಓದಿ/ಮದುವೆ ದಿಬ್ಬಣ ಚಿತ್ರೀಕರಣಕ್ಕೆ ಬ್ರೇಕ್ ಹಾಕಿದ ಫೋಟೋಗ್ರಾಫರ್ ಅಸೋಸಿಯೇಷನ್

