ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಸೋಮವಾರ ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಏಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು,.ಮಹಾಬಲೇಶ್ವರ ದೇವಾಲಯಕ್ಕೂ ಜಲಕಂಟಕ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತವಾಗುವ ಸಾಧ್ಯತೆ ಇದೆ.

ಭಾರೀ ಮಳೆಯ ಪರಿಣಾಮ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೂ ಜಲಕಂಟಕ ಎದುರಾಗಿದೆ. ಮಳೆ ಇದೇ ರೀತಿ ಮುಂದುವರಿದರೆ ದೇವಾಲಯದ ಗರ್ಭಗುಡಿಗೆ ನೀರು ನುಗ್ಗುವ ಸಾಧ್ಯತೆ ಇರುವುದಾಗಿ ದೇವಾಲಯ ಆಡಳಿತ ಉಸ್ತುವಾರಿ ಸಮಿತಿ ತಿಳಿಸಿದೆ.ಈ ಹಿನ್ನೆಲೆಯಲ್ಲಿ ಆತ್ಮಲಿಂಗ ಸ್ಪರ್ಶ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಳೆ ಹೆಚ್ಚಾದಲ್ಲಿ ಆತ್ಮಲಿಂಗ ಸ್ಪರ್ಶ ದರ್ಶನವನ್ನು ನಿಲ್ಲಿಸಿ, ಭಕ್ತರಿಗೆ ನಂದಿ ಮಂಟಪದಿಂದಲೇ ಆತ್ಮಲಿಂಗ ದರ್ಶನಕ್ಕೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಗೋಕರ್ಣಕ್ಕೆ ಆಗಮಿಸುವ ಭಕ್ತರು ಹಾಗೂ ಪ್ರವಾಸಿಗರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ರೆಡ್ ಅಲರ್ಟ್
ಇನ್ನೊಂದೆಡೆ, ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆ, ಬಿರುಗಾಳಿ ಹಾಗೂ ಕಡಲ ತೀರ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಜಿಲ್ಲಾಡಳಿತ ಕೂಡ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ನದಿ ತೀರ ಹಾಗೂ ಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ. ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯ ಸಂಚಾರವನ್ನು ತಪ್ಪಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಇದನ್ನೂ ಓದಿ/ಹಳಗಾದಿಂದ ಉಳಗಾವರೆಗೆ ಬಸ್ ಓಡಿಸಿ: ಕಾರವಾರ ಡಿಪೊ ಮ್ಯಾನೇಜರ್‌ಗೆ ಮನವಿ