ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಕಾಲೇಜಿನ ಶುಲ್ಕ ಪಾವತಿಸಲು ಕೂಡಿಟ್ಟಿದ್ದ ಹಣವನ್ನು ಮರಳಿ ಪಡೆಯಲು ಸಾಧ್ಯವಾಗದೇ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿ ಗಾಯತ್ರಿ ನಾಗರಾಜ ನಾಯ್ಕ (19) ಎಂದು ಗುರುತಿಸಲಾಗಿದೆ. ಗಾಯತ್ರಿ ಕಾಲೇಜಿನ ಶುಲ್ಕ ಪಾವತಿಸುವ ಉದ್ದೇಶದಿಂದ 10 ಸಾವಿರ ಹಣವನ್ನು ಸಂಗ್ರಹಿಸಿದ್ದು, ಅದನ್ನು ಪರಿಚಯದ ಜಾಲಿ ಗ್ರಾಮದ ಸಂತೋಷ ಎಂಬಾತನಿಗೆ ಹಿಂತಿರುಗಿಸುವ ಷರತ್ತಿನೊಂದಿಗೆ ನೀಡಿದ್ದರು ಎನ್ನಲಾಗಿದೆ.
ನಂತರ ಕಾಲೇಜಿನ ಶುಲ್ಕ ಪಾವತಿಸುವ ಸಮಯ ಸಮೀಪಿಸುತ್ತಿದ್ದಂತೆ ಹಣವನ್ನು ಮರಳಿ ನೀಡುವಂತೆ ಗಾಯತ್ರಿ ಹಲವು ಬಾರಿ ಕೇಳಿಕೊಂಡಿದ್ದರೂ, ಸಂತೋಷ ಹಣವನ್ನು ಹಿಂತಿರುಗಿಸಲು ನಿರಾಕರಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಚಾರದಿಂದ ತೀವ್ರವಾಗಿ ಮನನೊಂದಿದ್ದ ಗಾಯತ್ರಿ, ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮೃತಳ ತಂದೆ ನಾಗರಾಜ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ/ ಕುಮಟಾದಲ್ಲಿ ಭೀಕರ ದುರಂತ: ಬಸ್‌ನ ತೆರೆದ ಡಿಕ್ಕಿ ಬಾಗಿಲು ಬಡಿದು‌ ಕೆಎಸ್‌ಆರ್‌ಟಿಸಿ ಚಾಲಕ ಸಾವು