ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿರುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಸರ್ಕಾರ ಮುಂದಾಗಿದೆ.
ವಿಧಾನಸೌಧದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಅಕ್ರಮಗಳು ಸರ್ಕಾರದ ಗಮನಕ್ಕೆ ಬಂದಿರುವುದಾಗಿ ತಿಳಿಸಿದರು.
ಯೋಜನೆಯ ಕೆಲವು ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಹೆಸರಿನಲ್ಲೇ ಹಣ ವರ್ಗಾವಣೆ ನಡೆದಿರುವ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ನಿಜವಾದ ಅರ್ಹರಿಗೆ ಮಾತ್ರ ಯೋಜನೆಯ ಲಾಭ ದೊರೆಯುವಂತೆ ಫಲಾನುಭವಿಗಳ ದಾಖಲೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಈ ಕಾರಣದಿಂದ ಯೋಜನೆಯ ಎಲ್ಲ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ ಅವರು, ಯೋಜನೆಯನ್ನು ಸ್ಥಗಿತಗೊಳಿಸುವ ಅಥವಾ ಅರ್ಹರನ್ನು ಕೈಬಿಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು. ಸರಿಯಾದ ಮಾಹಿತಿ ನೀಡುವ ಅರ್ಹ ಮಹಿಳೆಯರಿಗೆ ಯೋಜನೆಯ ನೆರವು ನಿರಂತರವಾಗಿ ದೊರೆಯಬೇಕು ಎಂಬುದೇ ಸರ್ಕಾರದ ಗುರಿಯಾಗಿದೆ ಎಂದರು.
ಗೃಹಜ್ಯೋತಿ ಯೋಜನೆಯಲ್ಲೂ ಪರಿಶೀಲನೆ ಇದೇ ವೇಳೆ ಗೃಹಜ್ಯೋತಿ ಯೋಜನೆ ಕುರಿತೂ ಸರ್ಕಾರ ಪರಿಶೀಲನೆ ನಡೆಸಲು ಮುಂದಾಗಿದೆ. ಕೆಲವರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ವಿದ್ಯುತ್ ಮೀಟರ್ಗಳು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ನಿಜವಾದ ಬಳಕೆದಾರರು ಯಾರು ಎಂಬುದನ್ನು ಖಚಿತಪಡಿಸಿಕೊಳ್ಳುವ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

