ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ. ನಾಯ್ಕ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದರು.
ಮತದಾನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಅವರು “ಇಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದ್ದೇನೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಮ್ಮ ಪಕ್ಷದ ಐದೂ ಅಭ್ಯರ್ಥಿಗಳು ಭಾರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ವಿವಿಧ ಕ್ಷೇತ್ರಗಳ ಶಾಸಕರನ್ನು ಭೇಟಿ ಮಾಡುವ ಅವಕಾಶವೂ ದೊರೆಯಿತು. ಚುನಾವಣಾ ಪ್ರಕ್ರಿಯೆಯ ನಡುವೆ ಹಲವು ಸಮಕಾಲೀನ ರಾಜಕೀಯ ಬೆಳವಣಿಗೆಗಳ ಕುರಿತು ಆತ್ಮೀಯವಾಗಿ ಚರ್ಚೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಸುದೀರ್ಘ ಅವಧಿಯ ಬಳಿಕ ಸಹೋದ್ಯೋಗಿ ಶಾಸಕರನ್ನು ಒಂದೇ ವೇದಿಕೆಯಲ್ಲಿ ಭೇಟಿಯಾಗಿರುವುದು ಸಂತಸದ ಸಂಗತಿ. ಪಕ್ಷದ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವಿದ್ದು, ರಾಜ್ಯದ ಅಭಿವೃದ್ಧಿಗೆ ಅವರ ಸೇವೆ ಮತ್ತಷ್ಟು ಬಲ ನೀಡಲಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಅಭಿಪ್ರಾಯಪಟ್ಟರು.
ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು, ಫಲಿತಾಂಶದ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆ ಮಾಡಿದೆ.
ಇದನ್ನೂ ಓದಿ/ಪೆಂಡಾಲ್ ತೆಗೆಯುವಾಗ ವಿದ್ಯುತ್ ತಗುಲಿ ಕಾರ್ಮಿಕ ಸಾವು; ಕಾರವಾರದಲ್ಲಿ ದುರ್ಘಟನೆ



