ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ದಾಂಡೇಲಿಯಲ್ಲಿ ಎಮ್ಮೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ದುರ್ಘಟನೆ ತಾಲೂಕಿನ ಕುಳಗಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಚೆ ಇಲಾಖೆ ಸಿಬ್ಬಂದಿ ಉಮೇಶ್ ಭಟ್ (59) ಅವರು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತ ಉಮೇಶ್ ಭಟ್ ಅವರು ಅಂಬಿಕಾನಗರ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೂಲತಃ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದ ನಿವಾಸಿಯಾಗಿದ್ದರು. ಕರ್ತವ್ಯ ಮುಗಿಸಿ ಅಂಬಿಕಾನಗರದಿಂದ ಜನತಾ ಕಾಲೋನಿಯಲ್ಲಿರುವ ಸಂಬಂಧಿಕರ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕುಳಗಿಯ ಕನ್ನಡ ಶಾಲೆ ಸಮೀಪ ಹಠಾತ್ ಓಡಿಬಂದ ಎಮ್ಮೆಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಉಮೇಶ್ ಭಟ್ ಅವರ ತಲೆಗೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2027ರ ಏಪ್ರಿಲ್ ತಿಂಗಳಲ್ಲಿ ನಿವೃತ್ತಿಯಾಗಬೇಕಿದ್ದ ಉಮೇಶ್ ಭಟ್ ಅವರ ಆಕಸ್ಮಿಕ ನಿಧನ ಕುಟುಂಬಸ್ಥರು, ಬಂಧು-ಬಳಗ ಹಾಗೂ ಅಂಚೆ ಇಲಾಖೆ ಸಹೋದ್ಯೋಗಿಗಳಲ್ಲಿ ತೀವ್ರ ದುಃಖ ಉಂಟು ಮಾಡಿದೆ.

ದಾಂಡೇಲಿಯಲ್ಲಿ ಎಮ್ಮೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುವ ಜಾನುವಾರುಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಇದನ್ನೂ ಓದಿ/ವಿಧಾನ ಪರಿಷತ್ ಚುನಾವಣೆ: ಮತ ಚಲಾಯಿಸಿದ ಶಾಸಕ ಭೀಮಣ್ಣ ನಾಯ್ಕ; ಐದೂ ಸ್ಥಾನಗಳಲ್ಲಿ ಗೆಲುವಿನ ವಿಶ್ವಾಸ

ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ. ನಾಯ್ಕ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದರು.

ಮತದಾನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಅವರು “ಇಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಿದ್ದೇನೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಮ್ಮ ಪಕ್ಷದ ಐದೂ ಅಭ್ಯರ್ಥಿಗಳು ಭಾರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ” ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪಕ್ಷದ ಹಿರಿಯ ನಾಯಕರು ಹಾಗೂ ವಿವಿಧ ಕ್ಷೇತ್ರಗಳ ಶಾಸಕರನ್ನು ಭೇಟಿ ಮಾಡುವ ಅವಕಾಶವೂ ದೊರೆಯಿತು. ಚುನಾವಣಾ ಪ್ರಕ್ರಿಯೆಯ ನಡುವೆ ಹಲವು ಸಮಕಾಲೀನ ರಾಜಕೀಯ ಬೆಳವಣಿಗೆಗಳ ಕುರಿತು ಆತ್ಮೀಯವಾಗಿ ಚರ್ಚೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಸುದೀರ್ಘ ಅವಧಿಯ ಬಳಿಕ ಸಹೋದ್ಯೋಗಿ ಶಾಸಕರನ್ನು ಒಂದೇ ವೇದಿಕೆಯಲ್ಲಿ ಭೇಟಿಯಾಗಿರುವುದು ಸಂತಸದ ಸಂಗತಿ. ಪಕ್ಷದ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವಿದ್ದು, ರಾಜ್ಯದ ಅಭಿವೃದ್ಧಿಗೆ ಅವರ ಸೇವೆ ಮತ್ತಷ್ಟು ಬಲ ನೀಡಲಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು, ಫಲಿತಾಂಶದ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆ ಮಾಡಿದೆ.

ಇದನ್ನೂ ಓದಿ/ಪೆಂಡಾಲ್ ತೆಗೆಯುವಾಗ ವಿದ್ಯುತ್ ತಗುಲಿ ಕಾರ್ಮಿಕ ಸಾವು; ಕಾರವಾರದಲ್ಲಿ ದುರ್ಘಟನೆ