ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ವಿಚಾರಕ್ಕೆ ಸಂಬಂಧಿಸಿದಂತೆ ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿ ಮಹತ್ವದ ಹೇಳಿಕೆ ನೀಡಿದ್ದು, ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ನಾಯಕರು ಬ್ಲ್ಯಾಕ್ಮೇಲ್ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದು ಅವರು ಒತ್ತಾಯಿಸಿದ್ದಾರೆ.
ಕುಮಟಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಕೆಲ ಶಾಸಕರ ವಿರುದ್ಧ ಇರುವ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಅದರಿಂದಲೇ ಕೆಲವರು ಅವರಿಗೆ ಮತ ಹಾಕಿರುವ ಸಾಧ್ಯತೆ ಇದೆ” ಎಂದು ಆರೋಪಿಸಿದರು. ಚಂದ್ರ ಲಮ್ಮಾಣಿ ಹಾಗೂ ಭೈರತ್ತಿ ಬಸವರಾಜ್ ಅವರ ಹೆಸರನ್ನು ಉಲ್ಲೇಖಿಸಿದ ದಿನಕರ ಶೆಟ್ಟಿ, “ಇಬ್ಬರ ಮೇಲೂ ಪ್ರಕರಣಗಳಿವೆ. ಆ ಪ್ರಕರಣಗಳನ್ನೇ ಮುಂದಿಟ್ಟುಕೊಂಡು ಒತ್ತಡ ಹೇರಿರಬಹುದು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
ಇಬ್ಬರ ಮೊಬೈಲ್ ಕರೆಗಳ ವಿವರ (Call Details) ಪರಿಶೀಲಿಸಬೇಕು. ಮತದಾನಕ್ಕೂ ಮುನ್ನ ಹಾಗೂ ನಂತರ ಅವರಿಗೆ ಯಾರು ಕರೆ ಮಾಡಿದ್ದರು, ಯಾರನ್ನು ಭೇಟಿಯಾಗಿದ್ದರು ಎಂಬುದರ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಅವರು ಹೇಳಿದರು. ಅಡ್ಡಮತದಾನದ ವಿಚಾರದಲ್ಲಿ ನಾಲ್ಕೈದು ಶಾಸಕರ ಹೆಸರು ಕೇಳಿಬರುತ್ತಿದೆ. ಆದರೆ ಆ ಹೆಸರುಗಳನ್ನು ಬಹಿರಂಗವಾಗಿ ಹೇಳುವುದಿಲ್ಲ.
“ಅಡ್ಡಮತದಾನ ನಮ್ಮ ರಕ್ತದಲ್ಲೇ ಇಲ್ಲ. ನಾವು ಯಾವ ಪಕ್ಷದಲ್ಲಿದ್ದೇವೋ ಅದೇ ಪಕ್ಷಕ್ಕೆ ಮತ ಹಾಕುತ್ತೇವೆ. ನನ್ನ ಜೀವನದಲ್ಲಿ ಕಾಂಗ್ರೆಸ್ಗೆ ಮತ ಹಾಕಿಲ್ಲ, ಮುಂದೆಯೂ ಹಾಕುವುದಿಲ್ಲ” ಎಂದು ದಿನಕರ ಶೆಟ್ಟಿ ಸ್ಪಷ್ಟಪಡಿಸಿದರು.ಈ ಹೇಳಿಕೆಯು ಪರಿಷತ್ ಚುನಾವಣೆಯ ಅಡ್ಡಮತದಾನ ವಿವಾದಕ್ಕೆ ಹೊಸ ತಿರುವು ನೀಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸುವಂತೆ ಅವರು ಮತ್ತೊಮ್ಮೆ ಒತ್ತಾಯಿಸಿದ್ದಾರೆ.

