ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ಗ್ರಾಮೀಣ ಪ್ರದೇಶದ ಜನರಿಗೆ ಬಹುಮುಖ್ಯ ಸೇವೆಯೊಂದನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಗ್ರಾಮ ಪಂಚಾಯತಿ ವಾಸ ಸ್ಥಳ ದೃಢೀಕರಣ ಪತ್ರವನ್ನು ಗ್ರಾಮ ಪಂಚಾಯತಿಗಳಲ್ಲಿಯೇ ಪಡೆಯಬಹುದಾಗಿದೆ.
ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆ ಆದೇಶ ಹೊರಡಿಸಿದ್ದು, ವಾಸ ಸ್ಥಳ ದೃಢೀಕರಣ ಪತ್ರ ನೀಡುವ ಅಧಿಕಾರವನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಅವರಿಗೆ ನೀಡಲಾಗಿದೆ. ಈವರೆಗೆ ಗ್ರಾಮೀಣ ಪ್ರದೇಶದ ನಿವಾಸಿಗಳು ವಾಸ ಸ್ಥಳ ದೃಢೀಕರಣ ಪತ್ರ ಪಡೆಯಲು ಅಟಲ್ ಜೀ ಜನಸ್ನೇಹಿ ಕೇಂದ್ರಗಳಿರುವ ಹೋಬಳಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬೇಕಾಗುತ್ತಿತ್ತು. ಇದರಿಂದ ಸಮಯ ವ್ಯಯವಾಗುವುದರ ಜೊತೆಗೆ ತುರ್ತು ಸಂದರ್ಭಗಳಲ್ಲಿ ಪ್ರಮಾಣ ಪತ್ರ ಪಡೆಯಲು ವಿಳಂಬ ಉಂಟಾಗುತ್ತಿತ್ತು.
ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಈಗಾಗಲೇ ಬಾಪೂಜಿ ಸೇವಾ ಕೇಂದ್ರಗಳ ಮೂಲಕ 85ಕ್ಕೂ ಹೆಚ್ಚು ಸರ್ಕಾರಿ ಸೇವೆಗಳು ಲಭ್ಯವಿರುವ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತಿ ವಾಸ ಸ್ಥಳ ದೃಢೀಕರಣ ಪತ್ರ ಸೇವೆಯನ್ನೂ ಸ್ಥಳೀಯ ಮಟ್ಟದಲ್ಲೇ ಒದಗಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದ ಗ್ರಾಮೀಣ ಜನರಿಗೆ ತಮ್ಮ ಗ್ರಾಮದಲ್ಲಿಯೇ ವೇಗವಾಗಿ ಸುಲಭವಾಗಿ ಸೇವೆ ದೊರೆಯಲಿದೆ.ಸರ್ಕಾರದ ಆದೇಶದಂತೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರ್ಹ ನಿವಾಸಿಗಳಿಂದ ಬಾಪೂಜಿ ಸೇವಾ ಕೇಂದ್ರದ ಮೂಲಕ ಅರ್ಜಿಗಳನ್ನು ಸ್ವೀಕರಿಸಿ ಒಂದು ಬಾರಿಯ ಅಭಿಯಾನ ಮಾದರಿಯಲ್ಲಿ ವಾಸ ಸ್ಥಳ ದೃಢೀಕರಣ ಪತ್ರ ವಿತರಿಸಬೇಕು. ಇದಕ್ಕಾಗಿ ಈಗಾಗಲೇ ಅಟಲ್ ಜೀ ಜನಸ್ನೇಹಿ ಕೇಂದ್ರದ ತಂತ್ರಾಂಶದಲ್ಲಿರುವ ವ್ಯವಸ್ಥೆಯನ್ನೇ ಬಳಸಿಕೊಳ್ಳಲು ಸೂಚಿಸಲಾಗಿದೆ.
ಇದರೊಂದಿಗೆ, ಗ್ರಾಮ ಪಂಚಾಯತಿ ವಾಸ ಸ್ಥಳ ದೃಢೀಕರಣ ಪತ್ರ ನೀಡುವ ಸಂದರ್ಭದಲ್ಲಿ ಯಾವುದೇ ರೀತಿಯ ಸೇವಾ ಶುಲ್ಕ ವಿಧಿಸಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.
ಅಗತ್ಯ ದಾಖಲೆಗಳು, ಅರ್ಜಿ ನಮೂನೆ ಹಾಗೂ ಅನುಸರಿಸಬೇಕಾದ ಕಾರ್ಯವಿಧಾನದ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ 2026ರ ಜೂನ್ 13ರಂದು ನಡೆದ ಸಭೆಯಲ್ಲಿ ನೀಡಲಾದ ನಿರ್ದೇಶನಗಳ ಆಧಾರದ ಮೇಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ RDPR 599 GPA 2026 ಆದೇಶ ಸಂಖ್ಯೆ ಅಡಿಯಲ್ಲಿ ಜೂನ್ 20, 2026ರಂದು ಈ ಆದೇಶ ಹೊರಡಿಸಲಾಗಿದೆ. ಈ ಹೊಸ ವ್ಯವಸ್ಥೆಯಿಂದ ಗ್ರಾಮೀಣ ಜನರು ಹೋಬಳಿ ಕೇಂದ್ರಗಳಿಗೆ ತೆರಳುವ ಅಗತ್ಯ ಕಡಿಮೆಯಾಗಲಿದ್ದು, ತಮ್ಮ ಗ್ರಾಮ ಪಂಚಾಯತಿಗಳಲ್ಲಿಯೇ ವಾಸ ಸ್ಥಳ ದೃಢೀಕರಣ ಪತ್ರವನ್ನು ಉಚಿತವಾಗಿ ಹಾಗೂ ತ್ವರಿತವಾಗಿ ಪಡೆಯುವ ಅವಕಾಶ ದೊರೆಯಲಿದೆ.

