ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ:ಊಟಕ್ಕೆಂದು ಹೊಟೇಲ್‌ಗೆ ಬಂದಿದ್ದ  ಬಂದಿದ್ದ ಭಿಕ್ಷುಕ ದಂಪತಿಯನ್ನು ಹೋಟೆಲ್‌ಗೆ ಪ್ರವೇಶಿಸಲು ನಿರಾಕರಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ನಲ್ಲಿ ನಡೆದಿದೆ.

ಘಟನೆಯಲ್ಲಿ ಭಿಕ್ಷುಕ ಗಂಭೀರವಾಗಿ ಗಾಯಗೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೂಲತಃ ಸಾಗರ ತಾಲೂಕಿನ ಆಲಮಟ್ಟಿ ಗ್ರಾಮದ ದಂಪತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತು ಮನೆ ಹಾಗೂ ಅಂಗಡಿಗಳಿಗೆ ತೆರಳಿ ಭಿಕ್ಷಾಟನೆ ಮಾಡುತ್ತಿದ್ದರು. ಹಸಿವಿನಿಂದ ಬಳಲುತ್ತಿದ್ದ ದಂಪತಿ, ಊಟ ಮಾಡಲು ಗೋವರ್ಧನ ಹೋಟೆಲ್‌ಗೆ ತೆರಳಿದ್ದರು ಎನ್ನಲಾಗಿದೆ. ಆದರೆ ಆ ಭೀಕ್ಷುಕ ದಂಪತಿಗೆ ಹೋಟೆಲ್ ಒಳಗೆ ಪ್ರವೇಶಿಸಲು ಅವಕಾಶ ನೀಡದೆ, ಹೊರಕ್ಕೆ ತಳ್ಳಲಾಗಿದೆ ಎನ್ನಲಾಗಿದೆ.

ಹೋಟೆಲ್ ಮಾಲೀಕ ಗಣೇಶ ನಾಯ್ಕ ಹಾಗೂ ಸೆಕ್ಯೂರಿಟಿ ಗಾರ್ಡ್ ಭಿಕ್ಷುಕನ ಮೇಲೆ ಹಲ್ಲೆ ನಡೆಸಿ‌ದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಭಿಕ್ಷುಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಕಂಡ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುಮಟಾ ಪೊಲೀಸ್ ಠಾಣೆಯ ಪಿಎಸ್ಐ ಖಾದರ್ ಭಾಷಾ ಹಾಗೂ ರವಿಗುಡ್ಡೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಗಣೇಶ ನಾಯ್ಕ ಹಾಗೂ ಸೆಕ್ಯೂರಿಟಿ ಗಾರ್ಡ್ ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, “ಭಿಕ್ಷುಕ ತಪ್ಪು ಮಾಡಿದ್ದರೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತು. ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಅಮಾನವೀಯ ಕೃತ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ..

ಇದನ್ನೂ ಓದಿ……