ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ಇತ್ತೀಚಿನ ಹೇಳಿಕೆಗೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 17 ಶಾಸಕರನ್ನು ಹಣ ನೀಡಿ ಖರೀದಿಸಿ ಬಿಜೆಪಿ ಸರ್ಕಾರ ರಚಿಸಲಾಗಿತ್ತು ಎಂಬ ಈಶ್ವರಪ್ಪ ಅವರ ಹೇಳಿಕೆ ಅವರ ಮಾನಸಿಕ ಸ್ಥಿತಿಯ ಬಗ್ಗೆ ಪ್ರಶ್ನೆ ಮಾಡುವಂತಹ ಪರಿಸ್ಥಿತಿಯನ್ನು ನಿರ್ಮಿಸಿದೆ ಎಂದು ಹೆಬ್ಬಾರ್ ವಾಗ್ದಾಳಿ ನಡೆಸಿದರು.

ಯಲ್ಲಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಬಿಜೆಪಿ ಸರ್ಕಾರ ರಚನೆಯ ಸಂದರ್ಭದಲ್ಲಿ ಯಾರು ಯಾರಿಗೆ ಹಣ ನೀಡಿದ್ದಾರೆ ಎಂಬುದನ್ನು ದಾಖಲೆ ಸಮೇತ ಬಹಿರಂಗಪಡಿಸಬೇಕು. ದಾಖಲೆ ನೀಡಲು ಸಾಧ್ಯವಾಗದಿದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಪಡೆಯುವುದು ಒಳ್ಳೆಯದು” ಎಂದು ಸವಾಲು ಹಾಕಿದರು.

ಈಶ್ವರಪ್ಪ ಅವರ ಹೇಳಿಕೆ ಅಜ್ಞಾನದ ಪ್ರದರ್ಶನ ಎಂದು ಟೀಕಿಸಿದ ಹೆಬ್ಬಾರ್, “ಅವರ ಮಾನಸಿಕ ಸ್ಥಿತಿ ಸರಿ ಇಲ್ಲದಿದ್ದರೆ ಮಾನಸಿಕ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಕಿಡಿಕಾರಿದರು. 17 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬೆಂಬಲ ನೀಡಿದ್ದರಿಂದಲೇ ಸರ್ಕಾರ ರಚನೆಯಾಗಿದ್ದು, ಆ ಸರ್ಕಾರದಲ್ಲಿ ಈಶ್ವರಪ್ಪ ಅವರೇ ಸಚಿವರಾಗಿದ್ದರು ಎಂಬುದನ್ನು ಅವರು ನೆನಪಿಸಿದರು.

ಇದೇ ವೇಳೆ, ಬೆಳಗಾವಿಯ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ ಹೆಬ್ಬಾರ್, ಆ ಪ್ರಕರಣದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರು ಎಂದು ಹೇಳಿದರು. “ಇತರರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಮೊದಲು ಈಶ್ವರಪ್ಪ ಅವರು ತಮ್ಮ ರಾಜಕೀಯ ಜೀವನದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.ಈಶ್ವರಪ್ಪ ಅವರ ಆರೋಪಗಳನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರ ಇತ್ತೀಚಿನ ಹೇಳಿಕೆ ಹತಾಶ ಮನೋಭಾವದಿಂದ ಕೂಡಿದ ಹೇಳಿಕೆ ಎಂದು ಶಿವರಾಮ್ ಹೆಬ್ಬಾರ್ ಆರೋಪಿಸಿದರು.

ಇದನ್ನೂ ಓದಿ/ರೂಪಾಲಿ.ನಾಯ್ಕ್‌ಗೆ ‘ಜನಮೆಚ್ಚಿದ ಮಹಿಳಾ ನಾಯಕಿ’ ಪ್ರಶಸ್ತಿ