ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ:ವಿಷಪೂರಿತ ಹಾವು ಕಚ್ಚಿದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಅದೇ ಘಟನೆಯಲ್ಲಿ ಹಾವಿನ ಕಡಿತಕ್ಕೊಳಗಾದ ಆತನ ಸಹೋದರಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮಿಥುನ್ ಪುಟ್ಟಪ್ಪ ನಾಯ್ಕ (12) ಎಂದು ಗುರುತಿಸಲಾಗಿದೆ. ಹಾವಿನ ಕಡಿತಕ್ಕೊಳಗಾದ ಆತನ ಸಹೋದರಿ ದೀಕ್ಷಾ ಪುಟ್ಟಪ್ಪ ನಾಯ್ಕ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ. ಮಿಥುನ್ ಹಾಗೂ ದೀಕ್ಷಾ ಅವರು ರಾತ್ರಿ ಊಟ ಮುಗಿಸಿ ತಂದೆಯೊಂದಿಗೆ ಮನೆಯಲ್ಲೇ ಮಲಗಿದ್ದರು. ಮುಂಜಾನೆ ಇಬ್ಬರೂ ಏಕಾಏಕಿ ಎದ್ದು ವಾಂತಿ ಮಾಡತೊಡಗಿದಾಗ ಪಾಲಕರು ತಕ್ಷಣ ಲೈಟ್ ಹಾಕಿ ಪರಿಶೀಲಿಸಿದ್ದಾರೆ. ಈ ವೇಳೆ ಮಕ್ಕಳಿಬ್ಬರೂ ಅಸ್ವಸ್ಥರಾಗಿರುವುದು ಕಂಡುಬಂದಿದ್ದು, ಅಕ್ಕಪಕ್ಕದವರನ್ನು ಕರೆಸಿದ್ದಾರೆ.
ಸ್ಥಳೀಯರು ಮನೆಗೆ ಬರುವಷ್ಟರಲ್ಲಿ ಮನೆಯೊಳಗಿದ್ದ ಹಾವೊಂದು ಕತ್ತಲಿನಲ್ಲಿ ಹೊರಗೆ ಹೋಗಿರುವುದು ಕಂಡುಬಂದಿದೆ. ತಕ್ಷಣವೇ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಹಾಲಕ್ಷ್ಮೀ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಿಥುನ್ ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ.
ಇನ್ನೊಂದೆಡೆ, ದೀಕ್ಷಾ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ತಿಳಿದುಬಂದಿದೆ.ಮಿಥುನ್ನ ಕಿವಿಗೆ ಹಾಗೂ ದೀಕ್ಷಾಳ ಕೈ ಬೆರಳಿಗೆ ವಿಷಪೂರಿತ ಹಾವು ಕಚ್ಚಿರುವುದು ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಬನವಾಸಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಇದನ್ನೂ ಓದಿ/ಸಾಮಾಜಿಕ ಜಾಲತಾಣದ ಮೂಲಕ ಹಸಿ ಕಸ ಸಂಗ್ರಹಣೆ ಪುನರಾರಂಭಕ್ಕೆ 4ನೇ ತರಗತಿ ವಿದ್ಯಾರ್ಥಿನಿಯ ಮನವಿ



