ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಒಂದು ತಿಂಗಳು ಕಳೆದರೂ ಅಕ್ಷರ ದಾಸೋಹ (ಮಧ್ಯಾಹ್ನದ ಬಿಸಿಯೂಟ) ಯೋಜನೆಗೆ ಅಗತ್ಯವಿರುವ ಅಕ್ಕಿ ಇನ್ನೂ ಉತ್ತರಕನ್ನಡ ಜಿಲ್ಲೆಯ ಅನೇಕ ಸರ್ಕಾರಿ ಶಾಲೆಗಳಿಗೆ ಪೂರೈಕೆಯಾಗಿಲ್ಲ. ಪರಿಣಾಮ, ಮುಂದಿನ ದಿನಗಳಲ್ಲಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಜಿಲ್ಲೆಗಳ ಗೋದಾಮುಗಳಲ್ಲಿ ಅಕ್ಕಿ ಸಂಗ್ರಹವಿದ್ದರೂ ಶಾಲೆಗಳಿಗೆ ತಲುಪಿಸುವ ಪ್ರಕ್ರಿಯೆ ವಿಳಂಬವಾಗಿದೆ. ಜಿಲ್ಲಾ ಮಟ್ಟದಲ್ಲಿ ಅಕ್ಕಿ ಸಾಗಣೆ ಮತ್ತು ಪೂರೈಕೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಅಕ್ಕಿ ಪೂರೈಕೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಕೆಲವು ಶಾಲೆಗಳ ಎಸ್‌ಡಿಎಂಸಿ (ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ) ಸದಸ್ಯರು ತಾತ್ಕಾಲಿಕವಾಗಿ ಅಕ್ಕಿ ಒದಗಿಸಿ ಬಿಸಿಯೂಟ ಯೋಜನೆ ಮುಂದುವರಿಸುತ್ತಿದ್ದಾರೆ. ಇನ್ನೂ ಕೆಲವು ಕಡೆ ಸ್ಥಳೀಯ ಸೇವಾ ಸಹಕಾರಿ ಸಂಘಗಳು ಹಾಗೂ ಸೊಸೈಟಿಗಳು ಅಕ್ಕಿ ನೀಡಿ ಮಕ್ಕಳಿಗೆ ಬಿಸಿಯೂಟ ನಿಲ್ಲದಂತೆ ನೋಡಿಕೊಳ್ಳುತ್ತಿದೆ.

ಆದರೆ, ಸಾಕಷ್ಟು ಸಮಯ ಕಳೆದಿರುವುದರಿಂದ ಸಾಲವಾಗಿ ನೀಡಿದ ಅಕ್ಕಿಯನ್ನು ವಾಪಸ್ ನೀಡುವಂತೆ ಕೆಲವು ಸಹಕಾರಿ ಸಂಘಗಳು ಈಗ ಶಾಲೆಗಳ ಮೇಲೆ ಒತ್ತಡ ಹೇರಲು ಆರಂಭಿಸಿವೆ. ಇದರಿಂದ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್‌ಡಿಎಂಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಾಲಾ ಮಕ್ಕಳಿಗೆ ಪ್ರತಿದಿನ ಪೌಷ್ಟಿಕ ಆಹಾರ ಒದಗಿಸುವ ಮಹತ್ವದ ಅಕ್ಷರ ದಾಸೋಹ ಯೋಜನೆಗೆ ಅಕ್ಕಿ ಪೂರೈಕೆಯಲ್ಲಿ ಉಂಟಾಗಿರುವ ವಿಳಂಬದಿಂದ ಸಾವಿರಾರು ವಿದ್ಯಾರ್ಥಿಗಳು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಇಲಾಖೆ ಹಾಗೂ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಶಾಲೆಗಳಿಗೆ ಅಗತ್ಯ ಪ್ರಮಾಣದ ಅಕ್ಕಿಯನ್ನು ಪೂರೈಸಬೇಕಿದೆ.
ಇದೇ ವೇಳೆ, ಶಿಕ್ಷಣ ಇಲಾಖೆಗೆ ಪೂರ್ಣ ಪ್ರಮಾಣದ ಸಚಿವರ ನೇಮಕವಾಗದಿರುವುದು ಆಡಳಿತಾತ್ಮಕ ನಿರ್ಧಾರಗಳ ಮೇಲೂ ಪರಿಣಾಮ ಬೀರಿದ್ದು, ಅದರ ನೇರ ಹೊರೆ ಸರ್ಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳ ಮೇಲೆ ಬೀಳುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

ಇದನ್ನೂ ಓದಿ.ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬೆದರಿಕೆ