ಸುದ್ದಿಬಿಂದು ಬ್ಯೂರೋ ವರದಿ

ಶಿರಸಿ : ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬದನಗೋಡ ಗ್ರಾಮದ ನಿವಾಸಿ ಹಾಗೂ ರೌಡಿ ಆಸಾಮಿ ಸ್ವಾಮೇಲಾ @ ಸುನೀಲ್ ಗಡಿಪಾರು ಆದೇಶ ಉಲ್ಲಂಘಿಸಿದ ಪ್ರಕರಣದಲ್ಲಿ ಬನವಾಸಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಬದನಗೋಡ ಗ್ರಾಮದ ಸ್ವಾಮೇಲಾ @ ಸುನೀಲ್ ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ 2024 ಹಾಗೂ 2025ನೇ ಸಾಲಿನಲ್ಲಿ ಒಟ್ಟು ಆರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ರೌಡಿ ಹಾಳೆ ತೆರೆಯಲಾಗಿತ್ತು. ಆದಾಗ್ಯೂ, ರೌಡಿ ಚಟುವಟಿಕೆಗಳನ್ನು ಮುಂದುವರಿಸಿದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಗಡಿಪಾರು ಮಾಡುವಂತೆ ಕ್ರಮ ಕೈಗೊಳ್ಳಲಾಗಿತ್ತು.

ಉಪವಿಭಾಗಾಧಿಕಾರಿಗಳು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು, ಶಿರಸಿ ಅವರ ಆದೇಶದಂತೆ ಹಾಗೂ ಪೊಲೀಸ್ ಅಧೀಕ್ಷಕರ ಕ್ರಮದನ್ವಯ, ಆರೋಪಿಯನ್ನು 2026ರ ಮಾರ್ಚ್ 17ರಂದು ಯಾದಗಿರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿತ್ತು. ಅಂದು ಮಧ್ಯಾಹ್ನ 2 ಗಂಟೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಹಾಜರಾತಿ ದಾಖಲಿಸಿದ್ದ ಆತ, ಬಳಿಕ ಮಾರ್ಚ್ 18ರಿಂದ ಠಾಣೆಗೆ ಹಾಜರಾಗದೆ ಗೈರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗಡಿಪಾರು ಆದೇಶ ಉಲ್ಲಂಘಿಸಿದ ಆರೋಪದ ಮೇರೆಗೆ ಉಪವಿಭಾಗಾಧಿಕಾರಿಗಳ ಆದೇಶದಂತೆ ಬನವಾಸಿ ಪೊಲೀಸ್ ಠಾಣೆಯಲ್ಲಿ 2026ರ ಜೂನ್ 16ರಂದು ಗುನ್ನಾ ಸಂಖ್ಯೆ 66/2026ರಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 113 ಹಾಗೂ 114ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ಆರೋಪಿಯ ಪತ್ತೆಗಾಗಿ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಸಂಪತ್ ಇ.ಸಿ. ಅವರ ಮಾರ್ಗದರ್ಶನದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು.
ಜೂನ್ 23ರಂದು ದಾಸನಕೊಪ್ಪ ಕೆಇಬಿ ಗ್ರಿಡ್ ಸಮೀಪ ಆರೋಪಿಯಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಸ್ವಾಮೇಲಾ @ ಸುನೀಲ್‌ನನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಕಾನೂನು ಪ್ರಕ್ರಿಯೆ ಅನುಸರಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದಿಸಿದೆ.