ಸುದ್ದಿಬಿಂದು ಬ್ಯೂರೋ ವರದಿ
ಸಿದ್ದಾಪುರ ; ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ 70ಕ್ಕೂ ಅಧಿಕ ಅಡಿಕೆ ಸಿಪ್ಪೆ ಚಾಲಿ ಬೆಂಕಿಗಾಹುತಿಯಾಗಿದ್ದು, ಅಡಿಕೆ ಬೆಳೆಗಾರನಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.
ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅದು ವೇಗವಾಗಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಅಡಿಕೆ ಆಹುತಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ತಪ್ಪಿದ ಮತ್ತಷ್ಟು ಅನಾಹುತ ಅಗ್ನಿ ಅವಘಡದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಗ್ರಾಮಸ್ಥರು ತಕ್ಷಣವೇ ಸ್ಥಳಕ್ಕೆ ಧಾವಿಸಿ ತಮ್ಮ ಕೈಲಾದ ಪ್ರಯತ್ನದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಸಮಯೋಚಿತವಾಗಿ ಬೆಂಕಿ ನಿಯಂತ್ರಣಕ್ಕೆ ತಂದ ಪರಿಣಾಮ ಬೆಂಕಿ ಇನ್ನಷ್ಟು ವ್ಯಾಪಿಸುವುದು ತಪ್ಪಿದ್ದು, ಸಮೀಪದ ಇತರ ಆಸ್ತಿಪಾಸ್ತಿಗಳಿಗೆ ಹಾನಿಯಾಗುವುದನ್ನು ತಡೆಗಟ್ಟಲಾಯಿತು.
ಈ ಅಗ್ನಿ ಅವಘಡದಲ್ಲಿ ಶೇಡಿದಂಟಕಲ್ ನಿವಾಸಿ ವಿನಾಯಕ ಮಂಜುನಾಥ ಹೆಗಡೆ ಅವರಿಗೆ ಸೇರಿದ ಅಡಿಕೆ ಸಿಪ್ಪೆ ಚಾಲಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸಂಗ್ರಹಿಸಿಟ್ಟಿದ್ದ ಅಡಿಕೆಯ ಸುಮಾರು 90ಶೇಕಡಾ ಬೆಳೆ ಬೆಂಕಿಗೆ ಆಹುತಿಯಾಗಿದೆ. ವರ್ಷದ ಶ್ರಮದ ಫಲವಾಗಿದ್ದ ಅಡಿಕೆಯನ್ನು ಕ್ಷಣಾರ್ಧದಲ್ಲಿ ಕಳೆದುಕೊಂಡಿರುವ ಬೆಳೆಗಾರ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಅಗ್ನಿ ಅವಘಡದಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ.
ಘಟನೆಯ ಕುರಿತು ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಒ, ಶಾನುಭೋಗರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಪರಿಶೀಲನೆಯ ಬಳಿಕ ನಷ್ಟದ ನಿಖರ ಪ್ರಮಾಣ ಹಾಗೂ ಪರಿಹಾರದ ಕುರಿತು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.ಅಗ್ನಿ ಅವಘಡದಿಂದ ಅಪಾರ ನಷ್ಟ ಅನುಭವಿಸಿರುವ ಅಡಿಕೆ ಬೆಳೆಗಾರರಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಶೀಘ್ರವಾಗಿ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ/ ಶಾಲಾ ವೇಳಾಪಟ್ಟಿಯಲ್ಲಿ ಏಕರೂಪತೆ: ಇನ್ನು ಎಲ್ಲ ಶಾಲೆಗಳು ಬೆಳಗ್ಗೆ 8.30ರಿಂದ ಆರಂಭ



