ಸುದ್ದಿಬಿಂದು ಬ್ಯೂರೋ‌ ವರದಿ
ಶಿರಸಿ: ದೇಶವನ್ನು ಪೋಲಿಯೋ ಮುಕ್ತವಾಗಿರಿಸಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ. ನಾಯ್ಕ ಅವರು ಹೇಳಿದರು.

ಇಂದು ನಗರದ ಪ್ರಸಿದ್ಧ ಪಂಡಿತ್ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿ, ನಂತರ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.ಆಸ್ಪತ್ರೆಗೆ ಆಗಮಿಸಿದ ಶಾಸಕರು ಸಣ್ಣ ಮಕ್ಕಳಿಗೆ ಪೋಲಿಯೋ ಹನಿಯನ್ನು ಹಾಕುವ ಮೂಲಕ ತಾಲೂಕು ಮಟ್ಟದ ಅಭಿಯಾನಕ್ಕೆ ಚಾಲನೆ ನೀಡಿದರು.

ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಶ್ರಮವನ್ನು ಶ್ಲಾಘಿಸಿದ ಶಾಸಕರು, ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಲಸಿಕೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

“ಪೋಲಿಯೋ ನಿರ್ಮೂಲನೆಯಲ್ಲಿ ಭಾರತ ಸಾಧಿಸಿರುವ ಯಶಸ್ಸನ್ನು ಮುಂದುವರಿಸಲು ಯಾವುದೇ ಮಗು ಈ ಲಸಿಕೆಯಿಂದ ವಂಚಿತರಾಗಬಾರದು. ಪೋಷಕರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು” ಎಂದು ಶಾಸಕರು ಮನವಿ ಮಾಡಿದರು.”ಮಕ್ಕಳ ಆರೋಗ್ಯವೇ ದೇಶದ ಸಂಪತ್ತು. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಈ ಬೃಹತ್ ಅಭಿಯಾನವನ್ನು ಸಾರ್ವಜನಿಕರು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಬೇಕು.”

ಈ ಸಂದರ್ಭದಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯರು, ರೋಟರಿ ಕ್ಲಬ್ ನ ಪದಾಧಿಕಾರಿಗಳು, ಆರೋಗ್ಯ ರಕ್ಷಾ ಸಮಿತಿಯ ಪದಾಧಿಕಾರಿಗಳು, ಶುಶ್ರೂಷಕರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ/ಕಾರು ಸ್ಫೋಟದಲ್ಲಿ ಸಜೀವ ದಹನವಾದ ಯುವಕ