ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ, ಜೂನ್ 29: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಚೆಕ್ಪೋಸ್ಟ್ ಬಳಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮ ಮದ್ಯ ಸಾಗಣೆ ಪ್ರಕರಣ ಬಯಲಿಗೆ ಬಂದಿದ್ದು, 1,296 ಲೀಟರ್ (150 ಬಾಕ್ಸ್) ಮದ್ಯವನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿ, ಮದ್ಯ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ), ಮಂಗಳೂರು ವಿಭಾಗದ ನಿರ್ದೇಶನ, ಉತ್ತರ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನ ಹಾಗೂ ಕಾರವಾರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರ ಆದೇಶದಂತೆ, ಜೂನ್ 28ರಂದು ಮಾಜಾಳಿ ಚೆಕ್ಪೋಸ್ಟ್ ಬಳಿ ರಸ್ತೆಗಾವಲು ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅನುಮಾನಾಸ್ಪದ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ಮನ್ಸೂರ್ ಮುಹಮ್ಮದ್ (32) ಎಂಬಾತ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ (ನೋಂದಣಿ ಸಂಖ್ಯೆ: KE 41 D 1087)ದಲ್ಲಿ ಯಾವುದೇ ಮಾನ್ಯ ಪರವಾನಗಿ ಇಲ್ಲದೆ ಕರ್ನಾಟಕಕ್ಕೆ ವಿವಿಧ ಬ್ರಾಂಡ್ನ 1,296 ಲೀಟರ್ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಯಿತು.ದಾಳಿಯ ವೇಳೆ ಅಧಿಕಾರಿಗಳು ಸುಮಾರು ₹9 ಲಕ್ಷ ಮೌಲ್ಯದ ಭಾರತೀಯ ತಯಾರಿತ ವಿದೇಶಿ ಮದ್ಯ (IML) ಹಾಗೂ ₹8 ಲಕ್ಷ ಮೌಲ್ಯದ ಸರಕು ವಾಹನವನ್ನು ಜಪ್ತಿ ಮಾಡಿದ್ದಾರೆ. ಜಪ್ತಿಯಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹17 ಲಕ್ಷ ಎಂದು ಅಂದಾಜಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು, ಜಪ್ತಿಯಾದ ಮದ್ಯ ಹಾಗೂ ವಾಹನವನ್ನು ಅಬಕಾರಿ ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆ, 1965ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ. ಅಕ್ರಮ ಮದ್ಯ ಸಾಗಾಣಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ/ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್: ಜುಲೈ 2ರವರೆಗೆ ಭಾರೀ ಮಳೆ ಸಾಧ್ಯತೆ, ಜಿಲ್ಲಾಡಳಿತದಿಂದ ಕಟ್ಟೆಚ್ಚರ

