ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ, ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸದ ಅಂಗವಾಗಿ ಶನಿವಾರ ಬೆಳಿಗ್ಗೆ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು. ಆಸ್ಪತ್ರೆಯ ಸ್ವಚ್ಛತೆ, ನಿರ್ವಹಣೆ ಹಾಗೂ ವೈದ್ಯಕೀಯ ಸೇವೆಗಳ ಗುಣಮಟ್ಟವನ್ನು ಮೆಚ್ಚಿದ ಸಚಿವರು, ಉದ್ಘಾಟನೆಗೆ ಸಜ್ಜಾಗಿರುವ ಟ್ರಾಮಾ ಸೆಂಟರ್ಗೆ ಅಗತ್ಯವಿರುವ ವೈದ್ಯರು, ತಂತ್ರಜ್ಞರು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಒದಗಿಸುವುದಾಗಿ ಭರವಸೆ ನೀಡಿದರು.
ಪರಿಶೀಲನೆ ವೇಳೆ ಸಚಿವರು ಐಸಿಯು, ಡಯಾಲಿಸಿಸ್ ಸೆಂಟರ್, ಟ್ರಾಮಾ ಸೆಂಟರ್ ಹಾಗೂ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿದರು. ಆಸ್ಪತ್ರೆಯಲ್ಲಿ ದೊರೆಯುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದು, ಚಿಕಿತ್ಸೆಯ ಗುಣಮಟ್ಟದ ಕುರಿತು ರೋಗಿಗಳ ಅಭಿಪ್ರಾಯವನ್ನೂ ಆಲಿಸಿದರು.
ಈ ವೇಳೆ ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ಟ್ರಾಮಾ ಸೆಂಟರ್ ಕಟ್ಟಡ ಹಾಗೂ ವೈದ್ಯಕೀಯ ಉಪಕರಣಗಳ ಅಳವಡಿಕೆ ಪೂರ್ಣಗೊಂಡಿದ್ದರೂ, ಉದ್ಘಾಟನೆಗೂ ಮುನ್ನ ಅಗತ್ಯ ವೈದ್ಯರು, ತಂತ್ರಜ್ಞರು ಮತ್ತು ಇತರ ಸಿಬ್ಬಂದಿಯನ್ನು ನೇಮಕ ಮಾಡುವುದು ಅಗತ್ಯವಾಗಿದೆ. ಜೊತೆಗೆ ಆಸ್ಪತ್ರೆಗೆ ಇನ್ನಷ್ಟು ಮೂಲಸೌಕರ್ಯಗಳ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು.
ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಯು.ಟಿ. ಖಾದರ್, “ಕುಮಟಾದ ಟ್ರಾಮಾ ಸೆಂಟರ್ ಅನ್ನು ರಾಜ್ಯದಲ್ಲೇ ಮಾದರಿ ಆರೋಗ್ಯ ಕೇಂದ್ರವನ್ನಾಗಿ ರೂಪಿಸುವ ಜವಾಬ್ದಾರಿ ನನ್ನದು. ತಾಲೂಕು ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು, ಸಿಬ್ಬಂದಿ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.
ಆಸ್ಪತ್ರೆಯ ಸ್ವಚ್ಛತೆ ಮತ್ತು ವ್ಯವಸ್ಥಿತ ನಿರ್ವಹಣೆಯನ್ನು ಶ್ಲಾಘಿಸಿದ ಸಚಿವರು, “ಆಸ್ಪತ್ರೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ಇದೇ ರೀತಿಯ ಸೇವಾ ಮನೋಭಾವ ಮತ್ತು ಸ್ವಚ್ಛತೆಯನ್ನು ಮುಂದೆಯೂ ಕಾಪಾಡಿಕೊಳ್ಳಬೇಕು,” ಎಂದು ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಂಕಾಳು ಎಸ್ ವೈದ್ಯ, ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ಪ್ರಮುಖರಾದ ರತ್ನಾಕರ ನಾಯ್ಕ, ಆರ್ ಎಚ್ ನಾಯ್ಕ, ವೈಭವ ನಾಯ್ಕ, ವಿ ಎಲ್ ನಾಯ್ಕ, ಗಜು ನಾಯ್ಕ ಅಳ್ವೆಕೋಡಿ,
ಇದನ್ನೂ ಓದಿ/ ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ

