ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ನಗರದಲ್ಲಿ ಇಂದು ಸಂಜೆ ಬೀಸಿದ ಭಾರೀ ಗಾಳಿ ಮತ್ತು ಮಳೆಗೆ ನಗರದ ಹಲವು ಭಾಗಗಳಲ್ಲಿ ಮರಗಳು ಉರುಳಿ ಬಿದ್ದಿವೆ. ನಗರಸಭೆ ಪಕ್ಕದಲ್ಲಿರುವ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ಕಚೇರಿ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಕಚೇರಿ ಭಾಗಶಃ ದ್ವಂಸಗೊಂಡಿದೆ.

ಘಟನೆಯಿಂದ ಕಚೇರಿಯ ಮೇಲ್ಛಾವಣಿ ಹಾಗೂ ಒಳಭಾಗಕ್ಕೆ ಹಾನಿಯಾಗಿದ್ದು, ಕಚೇರಿಯಲ್ಲಿದ್ದ ದಾಖಲೆಗಳು ಮತ್ತು ಕಡತಗಳು ಚದುರಿಬಿದ್ದಿವೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಮರದ ಕೊಂಬೆಗಳನ್ನು ತೆರವುಗೊಳಿಸುವುದರ ಜೊತೆಗೆ ಕಚೇರಿಯಲ್ಲಿದ್ದ ಪ್ರಮುಖ ದಾಖಲೆಗಳು ಹಾಗೂ ಕಡತಗಳನ್ನು ಸುರಕ್ಷಿತವಾಗಿ ಹೊರತೆಗೆದು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನೆಯ ವೇಳೆ ಕಚೇರಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಭಾರೀ ಗಾಳಿ ಮತ್ತು ಮಳೆಯಿಂದ ಕಾರವಾರ ನಗರದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ/ಭಾರೀ ಗಾಳಿ-ಮಳೆ : ಕಾರಿನ ಮೇಲೆ ಬಿದ್ದ ಮರ, ತಪ್ಪಿದ ಅನಾಹುತ