ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದ ಶಿರಸಿಯ ಗಾಂಧಿನಗರದಲ್ಲಿ ಪಕ್ಕದ ಮನೆಯ ಕಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಗೆ ಹಾನಿಗೊಳಗಾದ ಸಂತ್ರಸ್ತ ಕುಟುಂಬಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಿ, ಸಂತ್ರಸ್ತರಿಗೆ ವೈಯಕ್ತಿಕ ಆರ್ಥಿಕ ನೆರವು ನೀಡಿದರು.
ಗಾಂಧಿನಗರದ ಬಿ.ಟಿ. ನಾಯ್ಕ ಬಾಶಿಯವರ ಪುತ್ರ ರಾಮಚಂದ್ರ ನಾಯ್ಕ ಅವರ ಮನೆಯ ಮೇಲೆ ಪಕ್ಕದ ಮನೆಯ ಕಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯ ಹಂಚು, ಗೋಡೆ ಹಾಗೂ ನೀರಿನ ಟ್ಯಾಂಕ್ಗೆ ಅಪಾರ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಹಾಗೂ ಶಿರಸಿ ನಗರ ಬಿಜೆಪಿ ಅಧ್ಯಕ್ಷ ಆನಂದ್ ಸಾಲೇರ್ ನೇತೃತ್ವದ ತಂಡ ಭೇಟಿ ನೀಡಿ ಪರಿಸ್ಥಿತಿಯನ್ನ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅನಂತಮೂರ್ತಿ ಹೆಗಡೆ, “ಸಂತ್ರಸ್ತ ರಾಮಚಂದ್ರ ನಾಯ್ಕ ಜೊಮ್ಯಾಟೋದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಮನೆಗೆ ಭಾರೀ ಹಾನಿಯಾಗಿದ್ದು, ಮತ್ತಷ್ಟು ಮಳೆ ಬಂದರೆ ಹೆಚ್ಚಿನ ಅಪಾಯ ಎದುರಾಗುವ ಸಾಧ್ಯತೆಯಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು” ಎಂದು ಒತ್ತಾಯಿಸಿದರು.
ಸಂತ್ರಸ್ತ ರಾಮಚಂದ್ರ ನಾಯ್ಕ ಮಾತನಾಡಿ, “ರಾತ್ರಿಯ ವೇಳೆ ಕಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯ ಹಂಚು, ಗೋಡೆ ಮತ್ತು ನೀರಿನ ಟ್ಯಾಂಕ್ ಸಂಪೂರ್ಣ ಹಾನಿಯಾಗಿದೆ.ನಾನು ಜೊಮ್ಯಾಟೋದಲ್ಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ.ಇದೀಗ ಮನೆಗೆ ಹಾನಿಯಾಗಿರುವುದರಿಂದ ಸಂಕಷ್ಟಕ್ಕೆ ಸಿಲುಕಿದ್ದೇನೆ” ಎಂದು ತಮ್ಮ ಅಳಲು ತೋಡಿಕೊಂಡರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಆನಂದ್ ಸಾಲೇರ್ ಅವರು ಸ್ಥಳದಲ್ಲಿಯೇ ನಗರಸಭೆ ಇಂಜಿನಿಯರ್ ಸುಫಿಯಾನ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ನಿರಂತರ ಮಳೆಯಿಂದ ಮಣ್ಣು ಕುಸಿಯುತ್ತಿರುವ ಗಂಭೀರ ಪರಿಸ್ಥಿತಿಯನ್ನು ವಿವರಿಸಿ, ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಇಂಜಿನಿಯರ್ ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಸಂತ್ರಸ್ತ ರಾಮಚಂದ್ರ ನಾಯ್ಕ ಅವರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ, “ನಾವು ನಿಮ್ಮೊಂದಿಗಿದ್ದೇವೆ. ಅಗತ್ಯ ನೆರವಿಗಾಗಿ ಸದಾ ಬೆಂಬಲವಾಗಿರುತ್ತೇವೆ” ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ ಹಾಗೂ ನಗರಸಭೆ ಮಾಜಿ ಉಪಾಧ್ಯಕ್ಷ ರಮಾಕಾಂತ್ ಭಟ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

