ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆ ಸ್ಥಳಾಂತರ ವಿಚಾರ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಕಾರವಾರದಲ್ಲಿದ್ದ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಕಾಲೇಜು ಆರಂಭವಾದ ಬಳಿಕ ವೈದ್ಯಕೀಯ ಶಿಕ್ಷಣ ಸಂಸ್ಥೆಯೊಂದಿಗೆ ವಿಲೀನಗೊಂಡಿದ್ದು, ಪ್ರತ್ಯೇಕ ಜಿಲ್ಲಾ ಆಸ್ಪತ್ರೆಯನ್ನು ಎಲ್ಲಿಯಲ್ಲಿ ಸ್ಥಾಪಿಸಬೇಕು ಎಂಬ ವಿಚಾರ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಸಿರೋ ಜನಾಭಿಪ್ರಾಯದಲ್ಲಿ ಶೇಕಡಾ 70ರಷ್ಟು ಜನ ಕುಮಟಾ ಸೂಕ್ತ ಎಂಬ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ..
ಆಡಳಿತ ಮಟ್ಟದಲ್ಲಿ ಜಿಲ್ಲಾ ಆಸ್ಪತ್ರೆಯನ್ನು ಶಿರಸಿಗೆ ಸ್ಥಳಾಂತರಿಸುವ ಕುರಿತು ಚರ್ಚೆ ನಡೆಯುತ್ತಿದೆ. ಇದಕ್ಕೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಜಿಲ್ಲಾ ಆಸ್ಪತ್ರೆಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಿಸಬಾರದು. ಒಂದು ವೇಳೆ ಅಂತಹ ನಿರ್ಧಾರ ಕೈಗೊಂಡರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಆಸ್ಪತ್ರೆಯನ್ನು ಶಿರಸಿಗೆ ಸ್ಥಳಾಂತರಿಸುವುದಕ್ಕೆ ತಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಥಳಾಂತರಿಸುವ ಅಗತ್ಯವಿದ್ದರೆ ಜಿಲ್ಲೆಯ ಮಧ್ಯಭಾಗದಲ್ಲಿರುವ ಕುಮಟಾಕ್ಕೆ ಸ್ಥಳಾಂತರಿಸಬೇಕು. ಇಲ್ಲವಾದರೆ ಕಾರವಾರದಲ್ಲೇ ಜಿಲ್ಲಾ ಆಸ್ಪತ್ರೆ ಮುಂದುವರೆಯಲಿ ಎಂದಿದ್ದಾರೆ.. ಈ ಮೂಲಕ ಶಿರಸಿಗೆ ಜಿಲ್ಲಾ ಆಸ್ಪತ್ರೆ ಸ್ಥಳಾಂತರಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ನಡುವೆ, ಜಿಲ್ಲಾ ಆಸ್ಪತ್ರೆ ಕಾರವಾರದಿಂದ ಸ್ಥಳಾಂತರವಾದರೆ ಯಾವ ಸ್ಥಳದಲ್ಲಿ ಸ್ಥಾಪಿಸಬೇಕು ಎಂಬ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಜನಾಭಿಪ್ರಾಯ ಸಂಗ್ರಹ ನಡೆಸಲಾಗಿತ್ತು. ಈ ಸಮೀಕ್ಷೆಯಲ್ಲಿ ಸುಮಾರು ಶೇಕಡಾ 70 ಮಂದಿ ಜಿಲ್ಲಾ ಆಸ್ಪತ್ರೆಯನ್ನು ಕುಮಟಾದಲ್ಲೇ ಸ್ಥಾಪಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲವಾದರೆ ಕಾರವಾರದಲ್ಲೇ ಮುಂದುವರಿಯಬೇಕು ಎಂಬ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಜಿಲ್ಲಾ ಆಸ್ಪತ್ರೆಯ ಸ್ಥಳಾಂತರ ಕುರಿತ ಚರ್ಚೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಆಡಳಿತ ಅಂತಿಮವಾಗಿ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುವುದರತ್ತ ಜಿಲ್ಲೆಯ ಜನರ ಚಿತ್ತ ನೆಟ್ಟಿದೆ. ಜಿಲ್ಲಾ ಆಸ್ಪತ್ರೆಯ ಸ್ಥಳ ನಿಗದಿಯ ವಿಚಾರ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

