ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಪಿಆರ್ಸಿ (PRC), ಅಕ್ರಮ ಬಾಂಗ್ಲಾದೇಶಿ ವಲಸಿಗರು ಹಾಗೂ ಜಾತಿ ಗಣತಿ ಕುರಿತು ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾಗಿದ್ದು, ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಪ್ರಸನ್ನ ನಾಯ್ಕ್ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಿಆರ್ಸಿ ಕುರಿತು ಈಗಾಗಲೇ ಸ್ಪಷ್ಟ ಮಾಹಿತಿ ನೀಡಿದ್ದಾರೆ. ನಾಗರಿಕತ್ವ ನೀಡುವುದು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ವಿಷಯವಾಗಿದೆ. ರಾಜ್ಯ ಸರ್ಕಾರ ನೀಡುತ್ತಿರುವುದು ಕೇವಲ ‘ಸ್ಥಳೀಯ ನಿವಾಸಿ’ ಪ್ರಮಾಣಪತ್ರವಾಗಿದ್ದು, ಅದರ ಮೂಲಕ ಯಾರಿಗೂ ಹೊಸದಾಗಿ ಭಾರತೀಯ ನಾಗರಿಕತ್ವ ನೀಡಲಾಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಪೂರಕವಾಗಿ ಅರ್ಹ ಸ್ಥಳೀಯ ನಿವಾಸಿಗಳನ್ನು ಗುರುತಿಸಲು ಮಾತ್ರ ಈ ನಿವಾಸಿ ಪ್ರಮಾಣಪತ್ರವನ್ನು ಬಳಸಲಾಗುತ್ತದೆ. ಕೇಂದ್ರ ಸರ್ಕಾರವೇ ನೀಡಿರುವ ಆಧಾರ್ ಕಾರ್ಡ್ ಹಾಗೂ ಚುನಾವಣಾ ಆಯೋಗ ಮಾನ್ಯಗೊಳಿಸಿರುವ 11 ಪ್ರಮುಖ ದಾಖಲೆಗಳನ್ನು ಪರಿಶೀಲಿಸಿದ ಬಳಿಕವೇ ನಿವಾಸಿ ಪ್ರಮಾಣಪತ್ರ ನೀಡಲಾಗುತ್ತದೆ. ಹಾಗಿದ್ದರೂ ದಾಖಲೆಗಳು ನಕಲಿಯಾಗಿವೆ ಎಂದು ಬಿಜೆಪಿ ಆರೋಪಿಸುತ್ತಿದ್ದರೆ, ಅದಕ್ಕೆ ಕೇಂದ್ರದ ವ್ಯವಸ್ಥೆಯ ವೈಫಲ್ಯವೇ ಕಾರಣವಾಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.
ಅಕ್ರಮ ಬಾಂಗ್ಲಾದೇಶಿ ವಲಸಿಗರು ದೇಶದೊಳಗೆ ಪ್ರವೇಶಿಸಿದ್ದಾರೆ ಎನ್ನುವುದಾದರೆ, ರಾಷ್ಟ್ರೀಯ ಭದ್ರತೆ ಮತ್ತು ಗಡಿ ರಕ್ಷಣೆಯ ಹೊಣೆ ಕೇಂದ್ರ ಸರ್ಕಾರ ಹಾಗೂ ಬಿಎಸ್ಎಫ್ ಮೇಲಿದೆ. ಹೀಗಿರುವಾಗ ಬಿಜೆಪಿ ಜಿಲ್ಲಾ ಅಧ್ಯಕ್ಷರು ಮತ್ತು ಮಾಜಿ ಶಾಸಕಿ ರೂಪಾಲಿ ನಾಯ್ಕ್ ಅವರ ಹೇಳಿಕೆಗಳು ಕೇಂದ್ರ ಸರ್ಕಾರದ ವೈಫಲ್ಯವನ್ನೇ ಬಹಿರಂಗಪಡಿಸುತ್ತಿವೆ ಎಂದು ಅವರು ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಅಕ್ರಮ ವಲಸಿಗರನ್ನು ಹೊರಹಾಕಲಾಗುತ್ತಿದೆ ಹಾಗೂ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ ಎಂಬ ರೂಪಾಲಿ ನಾಯ್ಕ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಸನ್ನ ನಾಯ್ಕ್, “ಅವರನ್ನು ದೇಶದ ಗಡಿ ದಾಟಿಸಿ ಹಿಂದಿರುಗಿಸುವ ಬದಲು ದೇಶದೊಳಗೆ ಬಿಡುತ್ತಿರುವುದು ಏಕೆ? ಇದು ಕೇಂದ್ರ ಸರ್ಕಾರದ ಭದ್ರತಾ ಲೋಪವನ್ನು ತೋರಿಸುತ್ತದೆ” ಎಂದು ಪ್ರಶ್ನಿಸಿದ್ದಾರೆ.
ಅಕ್ರಮ ವಲಸಿಗರು ಕರ್ನಾಟಕಕ್ಕೆ ಬಂದಿರುವ ಬಗ್ಗೆ ಮಾಹಿತಿ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ರೂಪಾಲಿ ನಾಯ್ಕ್ ಅವರು, ತಮ್ಮ ಬಳಿ ಮಾಹಿತಿ ಇದ್ದರೂ ಸಂಬಂಧಪಟ್ಟ ಪೊಲೀಸ್ ಅಥವಾ ತನಿಖಾ ಸಂಸ್ಥೆಗಳಿಗೆ ದೂರು ನೀಡದಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಗಂಭೀರ ವಿಷಯವಾಗಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ರೂಪಾಲಿ ನಾಯ್ಕ್ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜಾತಿ ಗಣತಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಬಿಜೆಪಿ ಮೊದಲಿನಿಂದಲೂ ವಿರೋಧಿ ನಿಲುವು ಹೊಂದಿದ್ದು, ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಬಿಜೆಪಿಗೆ ಇಲ್ಲ ಎಂದು ಪ್ರಸನ್ನ ನಾಯ್ಕ್ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವು ಹಿಂದುಳಿದ ವರ್ಗಗಳು ಹಾಗೂ ದಮನಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಬದ್ಧವಾಗಿದ್ದು, ಜಾತಿ ಗಣತಿ ವರದಿಯನ್ನು ಕಾನೂನುಬದ್ಧ ಹಾಗೂ ವೈಜ್ಞಾನಿಕವಾಗಿ ಪರಿಶೀಲಿಸಿ ಎಲ್ಲ ಸಮುದಾಯಗಳಿಗೂ ನ್ಯಾಯ ದೊರೆಯುವ ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ನಾಯಕರ ಬಳಿ ಅಕ್ರಮ ವಲಸಿಗರ ಕುರಿತು ಮಾಹಿತಿ ಇದ್ದರೂ ಯಾವುದೇ ರೀತಿಯ ಅಧಿಕೃತ ದೂರು ನೀಡದೇ ಇರುವುದು ಅವರ ನಡೆ ಬಗ್ಗೆ ತೀವ್ರ ಅನುಮಾನ ಮೂಡಿಸುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಸನ್ನ ನಾಯ್ಕ್ ತಿಳಿಸಿದ್ದಾರೆ.

