ಸುದಿಬಿಂದು ಬ್ಯೂರೋ ವರದಿ
ಬೆಂಗಳೂರು: ಮಲೆನಾಡು ಭಾಗದ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಮಂಗನ ಕಾಯಿಲೆ (Kyasanur Forest Disease–KFD) ತಡೆಗಟ್ಟುವಿಕೆ, ನಿಯಂತ್ರಣ ಹಾಗೂ ಪರಿಣಾಮಕಾರಿ ಚಿಕಿತ್ಸಾ ಕ್ರಮಗಳ ಕುರಿತು ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಭಾಗವಹಿಸಿ, ಉತ್ತರ ಕನ್ನಡ ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಹಲವು ಪ್ರಮುಖ ಸಲಹೆಗಳನ್ನು ಸರ್ಕಾರದ ಗಮನಕ್ಕೆ ತಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಂಗನ ಕಾಯಿಲೆ ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಲಸಿಕಾ ಅಭಿಯಾನ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಬಲವರ್ಧನೆ ಹಾಗೂ ಸೋಂಕು ಪತ್ತೆ ಮತ್ತು ಚಿಕಿತ್ಸಾ ವ್ಯವಸ್ಥೆ ಕುರಿತು ಸಮಗ್ರ ಚರ್ಚೆ ನಡೆಯಿತು.
ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಮಂಗನ ಕಾಯಿಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಅತ್ಯಂತ ಗಂಭೀರ ಮತ್ತು ಜನಪರ ನಿಲುವು ಹೊಂದಿದ್ದು, ಮಲೆನಾಡು ಭಾಗದ ಜನರ ಆರೋಗ್ಯ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ಹೇಳಿದರು.
“ಉತ್ತರ ಕನ್ನಡ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಸಕಾಲದಲ್ಲಿ ಲಸಿಕೆ ತಲುಪಿಸುವುದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಜಿಲ್ಲಾ ಆಸ್ಪತ್ರೆಗಳವರೆಗೆ ಗುಣಮಟ್ಟದ ಚಿಕಿತ್ಸಾ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿಡುವ ಕುರಿತು ಸಭೆಯಲ್ಲಿ ಒತ್ತಾಯಿಸಲಾಗಿದೆ. ಮಲೆನಾಡು ಭಾಗದ ಜನರ ಆರೋಗ್ಯ ರಕ್ಷಣೆಗಾಗಿ ಅಗತ್ಯ ಅನುದಾನ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ,” ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಇದನ್ನೂ ಓದಿ /ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,

