ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ: ಇಲ್ಲಿನ ಸ್ಟರ್ಲಿಂಗ್ ರಿವರ್ ರೆಸಾರ್ಟ್ನಲ್ಲಿ ಜಿಪ್ಲೈನ್ ಸಾಹಸ ಕ್ರೀಡೆ ವೇಳೆ ಸಂಭವಿಸಿದ ಅವಘಡದಲ್ಲಿ ವಿಜಯಪುರ ಮೂಲದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ
ರೆಸಾರ್ಟ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಗಾಯಾಳುವಿನ ಕುಟುಂಬ ಗಂಭೀರ ಆರೋಪ ಮಾಡಿದೆ.ವಿಜಯಪುರ ನಗರದ ನಿವಾಸಿ ಕುಬೇರ್ ಸುರಪುರ ಅವರು ಕಳೆದ ಜುಲೈ 3ರಂದು ತಮ್ಮ ಸಹೋದರ ಪ್ರಶಾಂತ ಸುರಪುರ ಅವರೊಂದಿಗೆ ದಾಂಡೇಲಿಯ ಸ್ಟರ್ಲಿಂಗ್ ರಿವರ್ ರೆಸಾರ್ಟ್ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಜಿಪ್ಲೈನ್ ಚಟುವಟಿಕೆಯಲ್ಲಿ ಭಾಗವಹಿಸಿದಾಗ, ಸುರಕ್ಷತೆಗೆ ಬಳಸಲಾಗಿದ್ದ ಲಾಕ್ ಕಟ್ ಆಗಿ ಸುಮಾರು 30ರಿಂದ 40 ಅಡಿ ಎತ್ತರದಿಂದ ಕುಸಿದು ಬಿದ್ದಿದ್ದಾರೆ.
ಈ ಭೀಕರ ಅಪಘಾತದ ದೃಶ್ಯಗಳು ಸಹೋದರ ಪ್ರಶಾಂತ್ ಅವರ ಮೊಬೈಲ್ನಲ್ಲಿ ಸೆರೆಯಾಗಿದೆ.ಅಪಘಾತದಲ್ಲಿ ಕುಬೇರ್ ಅವರ ಎರಡೂ ಕೈ ಹಾಗೂ ಎರಡೂ ಕಾಲಿನ ಎಲುಬುಗಳು ಮುರಿದಿದೆ. ಮೊದಲಿಗೆ ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಗಾಯಾಳುವಿನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಆರಂಭದಲ್ಲಿ ರೆಸಾರ್ಟ್ ಆಡಳಿತ ಭರವಸೆ ನೀಡಿತ್ತು ಎನ್ನಲಾಗಿದೆ. ಆದರೆ ಈಗ ಚಿಕಿತ್ಸಾ ವೆಚ್ಚದ ಬಗ್ಗೆ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೆ, ರೆಸಾರ್ಟ್ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇರುವುದೇ ಈ ಅವಘಡಕ್ಕೆ ಕಾರಣ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸ್ಟರ್ಲಿಂಗ್ ರಿವರ್ ರೆಸಾರ್ಟ್ ಮ್ಯಾನೇಜರ್, ಅಪಘಾತ ಸಂಭವಿಸಿರುವುದನ್ನು ಒಪ್ಪಿಕೊಂಡಿದ್ದು, ಇದು ಸಿಬ್ಬಂದಿಯ ನಿರ್ಲಕ್ಷ್ಯದಿಂದ ನಡೆದದ್ದಲ್ಲ, ಆಕಸ್ಮಿಕ ಘಟನೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ವಿಜಯಪುರಕ್ಕೆ ಭೇಟಿ ನೀಡಿ ಗಾಯಾಳುವಿನ ಕುಟುಂಬದೊಂದಿಗೆ ಮಾತುಕತೆ ನಡೆಸುವುದಾಗಿ ಅವರು ಹೇಳಿದ್ದಾರೆ.
ಮನರಂಜನೆಗಾಗಿ ತೆರಳಿದ್ದ ಪ್ರವಾಸ ಕ್ಷಣಾರ್ಧದಲ್ಲಿ ದುರಂತವಾಗಿ ಮಾರ್ಪಟ್ಟಿದ್ದು, ಯುವಕ ಈಗ ಹಾಸಿಗೆ ಹಿಡಿಯುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.



