ಸುದ್ದಿಬಿಂದು ಬ್ಯೂರೋ ವರದಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅಘನಾಶಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.

ಶಿರಸಿ–ಸಿದ್ದಾಪುರ ಗಡಿಭಾಗದ ಸರಕುಳಿ ಸೇತುವೆ ಹಾಗೂ ಶಿರಸಿಯ ಬಾರೂರು ಸಮೀಪ ಅಘನಾಶಿನಿ ನದಿಯ ನೀರಿನ ಮಟ್ಟ ಅಪಾಯದ ಹಂತ ತಲುಪಿದೆ. ಮಳೆ ಇದೇ ರೀತಿ ಮುಂದುವರಿದರೆ ಸೇತುವೆ ಸಂಪೂರ್ಣ ಜಲಾವೃತವಾಗುವ ಸಾಧ್ಯತೆ ಇದ್ದು, ಶಿರಸಿ, ತಟ್ಟಿಕೈ ಹಾಗೂ ಹೇರೂರು ಭಾಗಗಳ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.

ಮಳೆಯ ಅಬ್ಬರದಿಂದ ಪ್ರಸಿದ್ಧ ಉಂಚಳ್ಳಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಸುತ್ತಮುತ್ತಲಿನ ಕಣಿವೆ ಪ್ರದೇಶಗಳು ಜಲರಾಶಿಯಿಂದ ಕಂಗೊಳಿಸುತ್ತಿವೆ. ಮತ್ತೊಂದೆಡೆ ನದಿಗಳು ಹಾಗೂ ಹಳ್ಳಗಳು ತುಂಬಿ ಹರಿಯುತ್ತಿರುವ ಪರಿಣಾಮ ಪ್ರವಾಹದ ನೀರಿನಲ್ಲಿ ತೇಲಿ ಬಂದ ಹೆಬ್ಬಾವೊಂದು ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ನದಿಪಾತ್ರ ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳು ಮತ್ತು ಸಾರ್ವಜನಿಕರು ಅನಗತ್ಯವಾಗಿ ನೀರಿನ ಸಮೀಪ ತೆರಳದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ಆಡಳಿತ ನಿಗಾ ವಹಿಸಿದೆ.

ಇದನ್ನೂ ಓದಿ /School-Holiday/ನಾಳೆ ಶಾಲೆಗೆ ರಜೆ : ಜಿಲ್ಲಾಡಳಿತದಿಂದ ಘೋಷಣೆ