ಸುದ್ದಿಬಿಂದು ಬ್ಯೂರೋ ವರದಿ
ಚಿತ್ರದುರ್ಗ : ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯ ಬಳಿಕ ಎಲ್ಲ ಸಚಿವರು ಒಗ್ಗಟ್ಟಿನಿಂದ ಕೆಲಸ ಮಾಡಿ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಅವರು ಕರೆ ನೀಡಿದರು.
ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದ್ದು, ರೈತರಿಗೆ ಯಾವುದೇ ತೊಂದರೆ ಆಗದಂತೆ ಜಿಲ್ಲಾಡಳಿತ ಮತ್ತು ಸಚಿವರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಪ್ರದೇಶಗಳ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತವು ₹1 ಕೋಟಿ ವರೆಗೆ ವೆಚ್ಚ ಮಾಡುವಂತೆ ತೀರ್ಮಾನಿಸಲಾಗಿದ್ದು, ಅದರ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ನಡೆಯಬಾರದು ಎಂದು ಎಚ್ಚರಿಸಿದರು.
ಬರ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯಲಾಗುವುದು. ಇದೇ ವಿಷಯವಾಗಿ ಸೋಮವಾರ ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯನ್ನೂ ನಡೆಸಲಾಗುವುದು ಎಂದು ತಿಳಿಸಿದರು.
ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಸಂಬಂಧಿತ ಜಿಲ್ಲಾಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದರು.
ಹೊಸ ಬೋರ್ವೆಲ್ ಕೊರೆಯುವ ಮೊದಲು ಮತ್ತು ನಂತರದ ವಿಡಿಯೊ, ಛಾಯಾಚಿತ್ರ ಹಾಗೂ ಜಿಪಿಎಸ್ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಪಾರದರ್ಶಕತೆ ಕಾಪಾಡಲು ಪ್ರತಿಯೊಂದು ಹಂತದ ದಾಖಲೆಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬೆಳೆ ವಿಮೆ ಕುರಿತು ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಮಳೆಯ ನಿರೀಕ್ಷೆಯ ಮೇಲೆ ಬೆಳೆ ಬಿತ್ತುವ ಬದಲು ಸರ್ಕಾರ ಹಾಗೂ ನೀರಾವರಿ ಇಲಾಖೆಯ ಮಾರ್ಗದರ್ಶನದಂತೆ ಕೃಷಿ ಕೈಗೊಳ್ಳುವಂತೆ ರೈತರಿಗೆ ಸಲಹೆ ನೀಡಬೇಕು ಎಂದರು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿತ್ತನೆ ಬೀಜ ಮತ್ತು ಗೊಬ್ಬರದ ದಾಸ್ತಾನು ಕುರಿತು ಸ್ಥಳೀಯ ಶಾಸಕರಿಗೆ ನಿಯಮಿತ ಮಾಹಿತಿ ನೀಡಬೇಕು. ಕುಡಿಯುವ ನೀರಿನ ಕಾಮಗಾರಿಗಳು ಹಾಗೂ ರಸ್ತೆ ದುರಸ್ತಿಗೆ ಅರಣ್ಯ ಇಲಾಖೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬಾರದು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಕ್ಷೇತ್ರಗಳ ಶಾಸಕರು ಮುಖ್ಯಮಂತ್ರಿಯ ಹೊಸ ಆಡಳಿತ ಶೈಲಿ ಮತ್ತು ಜಿಲ್ಲಾ ಮಟ್ಟದಲ್ಲೇ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿರುವ ಕ್ರಮವನ್ನು ಮೆಚ್ಚಿ, ಇದರಿಂದ ಆಡಳಿತಕ್ಕೆ ಹೊಸ ಚೈತನ್ಯ ಬಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

