ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ತಾಲೂಕಿನ ಅವರ್ಸ–ಹಾರವಾಡ ಸಂಪರ್ಕಿಸುವ ಪ್ರಮುಖ ರಸ್ತೆ ಮಳೆಗಾಲ ಆರಂಭವಾದಾಗಲೆಲ್ಲ ನೀರಿನಲ್ಲಿ ಮುಳುಗುತ್ತಿದ್ದು, ಕಳೆದ ಐದು ವರ್ಷಗಳಿಂದ ಇದೇ ಸಮಸ್ಯೆ ಅಗುತ್ತಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಳೆ ನೀರು ರಸ್ತೆಯ ಮೇಲೆಯೇ ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಪರಿಣಾಮ ವಾಹನ ಸವಾರರು, ಪಾದಚಾರಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೀವದ ಹಂಗು ತೊರೆದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ರಸ್ತೆಯ ಮೂಲಕ ಪ್ರತಿದಿನ ಅಂಕೋಲಾಕ್ಕೆ ತೆರಳುವ ಸಾರ್ವಜನಿಕರು, ರೈತರು ಹಾಗೂ ಆಸ್ಪತ್ರೆಗೆ ಹೋಗುವ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆ ಗಾಲಪೂರ್ತಿ ರಸ್ತೆಯಲ್ಲಿ ನೀರು ತುಂಬಿಕೊಂಡಿರುತ್ತಿದ್ದು, ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ರಸ್ತೆ ಎನ್ನುವುದು ಹಳ್ಳದಂತಾಗುತ್ತದೆ. ಅನೇಕ ಬೈಕ್ ಸವಾರರಯ ಬಿದ್ದು ಗಾಯಗೊಂಡಿರುವ ಉದಾಹರಣೆ ಸಹ ಇದೆ. ವಿದ್ಯಾರ್ಥಿಗಳನ್ನ ಶಾಲೆಗೆ ಕರೆದೊಯ್ಯುವ ಪಾಲಕರು ಸಹ ಆತಂಕದ ನಡುವೆಯೇ ಸಂಚರಿಸಬೇಕಾದ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಈ ಸಮಸ್ಯೆಯನ್ನು ಹಲವು ಬಾರಿ ಅವರ್ಸ ಗ್ರಾಮ ಪಂಚಾಯಿತಿಯ ಪಿಡಿಓ ಅವರ ಗಮನಕ್ಕೆ ತರಲಾಗಿದೆ. ಹಾರವಾಡ ಗ್ರಾಮ ಪಂಚಾಯಿತ ಕೂಡ ಕಳೆದ ಐದು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸುತ್ತಲೇ ಬಂದಿದೆ. ಆದರೂ ಪ್ರತಿ ಮಳೆಗಾಲದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಭರವಸೆ ನೀಡುತ್ತಾರೆ. ಆದರೆ ನೀರು ಇಳಿದ ಬಳಿಕ ಸಮಸ್ಯೆಯನ್ನು ಮರೆತು ಬಿಡುತ್ತಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
ಪ್ರತಿ ವರ್ಷ ಮಳೆಗಾಲದಲ್ಲಿ ರಸ್ತೆ ಕೆರೆಯಂತಾಗಿ ಜನಜೀವನ ಅಸ್ತವ್ಯಸ್ತವಾಗುವುದು ಸಾಮಾನ್ಯ ದೃಶ್ಯವಾಗಿದೆ. ಹೀಗಾಗಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೇವಲ ಪರಿಶೀಲನೆಗೆ ಸೀಮಿತವಾಗದೆ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿರುವುದನ್ನ ತಪ್ಪಿಸಬೇಕಿದೆ. ಈ ನಿಟ್ಟಿನಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಂಡು ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

