ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ :ಮನೆ ಕಳ್ಳತನ ಪ್ರಕರಣದಲ್ಲಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಗೋಕರ್ಣ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
2016ರ ನವೆಂಬರ್ 24ರಂದು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆ ಕಳ್ಳತನ ಪ್ರಕರಣ (ಕ್ರೈಂ ನಂ.103/2016) ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 457 ಮತ್ತು 380 ಅಡಿಯಲ್ಲಿ ಶೇಖರ ಮಚ್ಚೇಂದ್ರ ಗಣಾಚಾರಿ, ಬಂಗ್ಲೆಗುಡ್ಡ, ಗೋಕರ್ಣ ನಿವಾಸಿ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ 2017ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿಕೊಂಡಿದ್ದ ಆರೋಪಿಯನ್ನು ಜುಲೈ 31, 2026ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿಬೂದಿಹಾಳ ಗ್ರಾಮದಲ್ಲಿ ಗೋಕರ್ಣ ಪೊಲೀಸರು ಪತ್ತೆಹಚ್ಚಿ ಬಂಧಿಸಿದರು.ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಕೆ.ಎಸ್., ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ್ ಬಿ.ಕೆ. ಅವರ ಮಾರ್ಗದರ್ಶನದಲ್ಲಿ ಗೋಕರ್ಣ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಸುನೀಲ್ ಎಂ., ಅನಿಲ್ ಬಿ.ಎಂ., ಠಾಣೆಯ ಸಿಬ್ಬಂದಿ ರಾಜೇಶ್ ನಾಯ್ಕ, ಶ್ರೀಕಾಂತ ಕೆ., ಪರಮೇಶ್ವರ ಬೆಂಡಗಟ್ಟಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಮತ್ತು ಬಬನ್ ಕದಂ ಭಾಗವಹಿಸಿದ್ದರು.
ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳಿತೆ ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.
ಇದನ್ನೂ ಓದಿ/ಗೋಕರ್ಣ ಠಾಣೆಯಲ್ಲಿ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳ ಸಭೆ

