ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು/ನವದೆಹಲಿ: ರಾಜ್ಯದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ, ಕಾಂಗ್ರೆಸ್ ಹೈಕಮಾಂಡ್ ಇನ್ನೂ ಸಚಿವರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ನಾಳೆ (ಆ. 3) ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಅನುಮಾನ ಎನ್ನಲಾಗುತ್ತಿದೆ.
ಸಚಿವರ ಆಯ್ಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಕಾಂಗ್ರೆಸ್ನ ಹಿರಿಯ ನಾಯಕರು ದೆಹಲಿಯಲ್ಲಿ ಇದುವರೆಗೆ ಯಾವುದೇ ಮಹತ್ವದ ಸಭೆ ನಡೆಸಿಲ್ಲ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ರಾಜ್ಯದ ಕಾಂಗ್ರೆಸ್ ನಾಯಕರಲ್ಲಿಯೂ ನಾಳೆ ಸಂಪುಟ ವಿಸ್ತರಣೆ ಅನುಮಾನ ಹುಟ್ಟಿಸಿದೆ. ಸಂಜೆಯೊಳಗೆ ಸಚಿವರ ಅಂತಿಮ ಪಟ್ಟಿ ಸಿದ್ಧವಾದಲ್ಲಿ ನಾಳೆಯೇ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಪಟ್ಟಿ ಅಂತಿಮಗೊಳ್ಳದಿದ್ದರೆ ಸಂಪುಟ ವಿಸ್ತರಣೆ ಇನ್ನೆರಡು ದಿನಗಳವರೆಗೆ ಮುಂದೂಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಎರಡನೆ ಹಂತದ ಸಚಿವ ಸಂಪುಟದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುರಿತು ರಾಜ್ಯದ ಯಾವುದೇ ಹಿರಿಯ ನಾಯಕರಿಗೂ ಸ್ಪಷ್ಟ ಮಾಹಿತಿ ಇಲ್ಲ. ಅಂತಿಮ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಿದ ಬಳಿಕವೇ ಹೊಸ ಸಚಿವರ ಹೆಸರುಗಳು ಖಚಿತವಾಗಲಿವೆ. ಇದುವರೆಗೆ ವಿವಿಧ ಹೆಸರುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದರೂ, ಅವೆಲ್ಲವೂ ಊಹಾಪೋಹಗಳಷ್ಟೇ. ಕಾಂಗ್ರೆಸ್ ಹೈಕಮಾಂಡ್ನ ಅಂತಿಮ ನಿರ್ಧಾರದತ್ತ ರಾಜ್ಯದ ರಾಜಕೀಯ ಚಿತ್ತ ನೆಟ್ಟಿದೆ

