ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಮಂಕಾಳ್ ಎಸ್. ವೈದ್ಯ ಅವರು ಮತ್ತೊಮ್ಮೆ ಸಚಿವರಾಗಿ ಸಂಪುಟ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ದೊರೆತಿದ್ದು, ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿದೆ.

ಮಂಕಾಳ್ ವೈದ್ಯ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರಿಗೆ ಸಚಿವ ಸ್ಥಾನ ನೀಡಿರುವುದು ಉತ್ತರ ಕನ್ನಡ ಜಿಲ್ಲೆಗೆ ಮಹತ್ವದ ರಾಜಕೀಯ ಬೆಳವಣಿಗೆಯಾಗಿದೆ.
ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಂಕಾಳ್ ವೈದ್ಯ ಅವರು, ಮತ್ತೊಮ್ಮೆ ಸಚಿವರಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ.

ಭಟ್ಕಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಂಕಾಳ್ ವೈದ್ಯ ಅವರು ಕರಾವಳಿ ಭಾಗದ ಅಭಿವೃದ್ಧಿ, ಮೀನುಗಾರರ ಸಮಸ್ಯೆಗಳ ಪರಿಹಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ ನಾಯಕರಾಗಿ ಹೆಸರುವಾಸಿಯಾಗಿದ್ದಾರೆ. ಅವರ ಪುನರಾಯ್ಕೆ ಹಾಗೂ ಸಚಿವ ಸಂಪುಟ ಪ್ರವೇಶದಿಂದ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

ಗಮನಾರ್ಹ ಸಂಗತಿಯೆಂದರೆ, ಮಂಕಾಳ್ ವೈದ್ಯ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎಂಬ ಸುದ್ದಿಯನ್ನು ಸುದ್ದಿಬಿಂದು ಅಧಿಕೃತ ಘೋಷಣೆಗೆ ಮುನ್ನವೇ ಬ್ರೇಕ್ ಮಾಡಿತ್ತು. ಇದೀಗ ಆ ಮಾಹಿತಿ ಅಧಿಕೃತವಾಗಿ ಸತ್ಯವಾಗಿದ್ದು, ಸುದ್ದಿಬಿಂದು ನೀಡಿದ್ದ ವರದಿ ಮತ್ತೊಮ್ಮೆ ನಿಖರವಾಗಿದೆ.

ಮಂಕಾಳ್ ವೈದ್ಯ ಅವರ ಸಚಿವ ಸ್ಥಾನದಿಂದ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಪ್ರಾತಿನಿಧ್ಯ ದೊರೆತಿದ್ದು, ಜಿಲ್ಲೆಯ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.